ಶಿವಮೊಗ್ಗ : ಮಲೆನಾಡಿನ ಸಮಗ್ರ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿ, ಈ ಭಾಗಕ್ಕೆ ಆರ್ಥಿಕ ಶಕ್ತಿ ತುಂಬಲು ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ನೀಡಲು ಸರ್ಕಾರ ತೀರ್ಮಾನಿಸಿದೆ. ಜಿಲ್ಲಾ ಉಸ್ತುವಾರಿ ಸಚಿವರು ತಿಂಗಳಿಗೆ ಕಡ್ಡಾಯವಾಗಿ ಎರಡು ಬಾರಿ ಜಿಲ್ಲೆಗೆ ಭೇಟಿ ನೀಡಿ ಪ್ರಜಾಸೇವೆ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕು’ ಎಂದು ಸಿಎಂ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.
ಇಂದು ತೀರ್ಥಹಳ್ಳಿ ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ 75ನೇ ವರ್ಷದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಡಿಕೆ ಶಿವಕುಮಾರ್, ‘ನಮ್ಮ ಸರ್ಕಾರ ಸಂಪೂರ್ಣವಾಗಿ ರೈತರ ಪರವಾಗಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು’ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ.
‘ಪಾರಂಪರಿಕ ಕೃಷಿಗೆ ಸರ್ಕಾರ ಯಾವುದೇ ಅಡ್ಡಿ ಮಾಡುವುದಿಲ್ಲ. ಮಲೆನಾಡಿನ ರೈತರಿಗೆ ಹೊಸದಾಗಿ ನೋಟಿಸ್ ಜಾರಿ ಮಾಡದಂತೆ ಅಧಿಕಾರಿಗಳಿಗೆ ಹೇಳುವೆ. ಅಕ್ರಮ-ಸಕ್ರಮ (94ಸಿ) ವಿಚಾರವಾಗಿ ಶೀಘ್ರದಲ್ಲೇ ಪ್ರತ್ಯೇಕ ಸಭೆ ಮಾಡಲಾಗುವುದು. ಶಾಸಕರು ಈ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಸಲಿ’ ಎಂದು ಅವರು ಹೇಳಿದರು.
‘ತೇಗದ ಸಿರಿ’ ಹೊಸ ಯೋಜನೆ: ರೈತರಿಗೆ ಶೇ. 70ರಷ್ಟು ಲಾಭಾಂಶ
‘ರೈತರ ಆದಾಯ ಹೆಚ್ಚಿಸಲು ಸರ್ಕಾರ ‘ತೇಗದ ಸಿರಿ’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ ಈ ಯೋಜನೆಯಡಿ ರೈತರ ಜಮೀನುಗಳಲ್ಲಿ ಗಿಡಗಳನ್ನು ಬೆಳೆಸಲು ನಾವು ಕೊಡುತ್ತೇವೆ. ನಂತರ ಆ ಮರಗಳನ್ನು ಬೆಳೆದು ಮಾರಾಟ ಮಾಡಿದಾಗ ಶೇ. 70ರಷ್ಟು ಪಾಲು ರೈತರಿಗೆ ಹಾಗೂ ಶೇ. 30ರಷ್ಟು ಪಾಲು ಸರ್ಕಾರಕ್ಕೆ ಸಿಗಲಿದೆ. ಜನರ ಬದುಕಿಗೆ ಶಕ್ತಿ ತುಂಬಲು ಹೊಸ ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತಿದೆ’ ಎಂದು ಅವರು ತಿಳಿಸಿದರು.
