ಮೈಸೂರು, ನವೆಂಬರ್ 29, 2025 :ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಿ ಮುಂದುವರಿಸಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ, ಅಹಿಂದ ಸಂಘಟನೆಗಳು ಮತ್ತು ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿಗಳು ಕಾಂಗ್ರೆಸ್ ಹೈಕಮಾಂಡ್ಗೆ ಪ್ರಬಲ ಹಕ್ಕೊತ್ತಾಯ ಮಾಡಿವೆ.
ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ದುಂಡುಮೇಜಿನ ಸಭೆಯಲ್ಲಿ ಈ ನಿರ್ಣಯವನ್ನು ಅಂಗೀಕರಿಸಲಾಯಿತು.ಸಭೆಯಲ್ಲಿ ಮಾತನಾಡಿದ ಮುಖಂಡರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸ್ಥಾನದಿಂದ ಕೆಳಗಿಳಿಸಿದರೆ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ದೂರವಾಗುವುದಾಗಿ ಮತ್ತು ಅಹಿಂದ ಮತಗಳು ಕೈತಪ್ಪಲಿವೆ ಎಂದು ಹೈಕಮಾಂಡ್ಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ.
ಯಾವುದೇ ಸನ್ನಿವೇಶ ಎದುರಾದರೂ ಸಿದ್ದರಾಮಯ್ಯ ಅವರ ಜೊತೆಗೆ ನಿಲ್ಲುವುದಾಗಿ ಸಭೆಯಲ್ಲಿದ್ದ ಮುಖಂಡರು ಬೆಂಬಲದ ಪ್ರತಿಜ್ಞೆ ಸ್ವೀಕರಿಸಿದರು. ಒಂದು ವೇಳೆ ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ, ದೆಹಲಿಯ ಎಐಸಿಸಿ (AICC) ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲು ಸಭೆಯಲ್ಲಿ ನಿರ್ಣಯಿಸಲಾಯಿತು.
ಅಹಿಂದ ಮತಗಳ ಪಾಲು ಪ್ರಸ್ತಾಪ
ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿ ಮುಂದುವರಿಸಲು ಹಕ್ಕೊತ್ತಾಯ ಮಾಡುತ್ತಿರುವ ಸಂಘಟನೆಗಳು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಅಹಿಂದ ಮತದಾರರ ಪಾತ್ರವನ್ನು ಒತ್ತಿಹೇಳಿವೆ.ಶೇಕಡಾ 65 ರಿಂದ 75 ರಷ್ಟು ಅಹಿಂದ ವರ್ಗದವರು ಕಾಂಗ್ರೆಸ್ಗೆ ಮತ ನೀಡಿದ್ದಾರೆ. ಕೇವಲ ಶೇಕಡಾ 15 ರಿಂದ 20 ರಷ್ಟು ಮಾತ್ರ ಒಕ್ಕಲಿಗರು ಕಾಂಗ್ರೆಸ್ಗೆ ಮತ ನೀಡಿದ್ದಾರೆ. ಹೀಗಾಗಿ, ಸಿದ್ದರಾಮಯ್ಯನವರನ್ನು ಕೆಳಗಿಳಿಸಿದರೆ ಅಹಿಂದ ಮತಗಳು ಕಾಂಗ್ರೆಸ್ನಿಂದ ಖಂಡಿತವಾಗಿ ಕೈತಪ್ಪುತ್ತವೆ ಎಂದು ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.
ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಹುದ್ದೆಯಿಂದ ಕೆಳಗಿಳಿಸಬಾರದು ಎಂದು ಈ ಸಂಘಟನೆಗಳು ಕಾಂಗ್ರೆಸ್ ನಾಯಕತ್ವವನ್ನು ಆಗ್ರಹಿಸಿವೆ.
