ಟಿ ನರಸೀಪುರ, ಡಿಸೆಂಬರ್ 29, 2025 : ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಬಿ. ಸೀಹಳ್ಳಿ ಗ್ರಾಮದಲ್ಲಿ ಮನಕಲಕುವ ಘಟನೆಯೊಂದು ನಡೆದಿದ್ದು, ಪ್ರೀತಿಸುತ್ತಿದ್ದ ಯುವತಿಯ ಸಂಬಂಧಿಕರಿಂದ ಹಲ್ಲೆಗೊಳಗಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬಿ. ಸೀಹಳ್ಳಿ ಗ್ರಾಮದ ನಿವಾಸಿ 23 ವರ್ಷದ ನಾಗೇಂದ್ರ ಮೃತಪಟ್ಟ ದುರ್ದೈವಿ. ಯುವತಿಯನ್ನು ಪ್ರೀತಿಸುತ್ತಿದ್ದ ಎಂಬ ಕಾರಣಕ್ಕೆ ಆಕೆಯ ಸಂಬಂಧಿಕರು ನಾಗೇಂದ್ರನ ಮೇಲೆ ಹಲ್ಲೆ ನಡೆಸಿದ್ದರು ಎಂದು ಕುಟುಂಬಸ್ಥರು ಗಂಭೀರವಾಗಿ ಆರೋಪಿಸಿದ್ದಾರೆ.
ಹಲ್ಲೆಯಿಂದ ಮನನೊಂದ ಯುವಕ ನಾಗೇಂದ್ರ ತನ್ನ ಮನೆಯ ಹಸುವಿನ ಕೊಟ್ಟಿಗೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಿಸಿದ್ದು, ಮೃತ ಯುವಕನ ಪೋಷಕರು ಮತ್ತು ಸಂಬಂಧಿಕರು ನಾಗೇಂದ್ರನ ಸಾವಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಯುವತಿಯ ಕುಟುಂಬದ ಸದಸ್ಯರಾದ ಜೈಕುಮಾರ್, ಮಂಜು ಸೇರಿದಂತೆ ಒಟ್ಟು ಐವರು ವ್ಯಕ್ತಿಗಳ ಮೇಲೆ ಬನ್ನೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು, ಸಾವಿನ ಹಿಂದಿನ ನಿಖರ ಕಾರಣಗಳ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.
