ಉಡುಪಿ, ಜನವರಿ 28, 2026 : ಕೋಡಿಬೆಂಗ್ರೆ ಸಮೀಪ ಸಂಭವಿಸಿದ ಭೀಕರ ಬೋಟ್ ದುರಂತದ ಕಹಿ ನೆನಪು ಮಾಸುವ ಮುನ್ನವೇ ಉಡುಪಿ ಜಿಲ್ಲಾಡಳಿತದ ಬೇಜವಾಬ್ದಾರಿತನ ಈಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಪ್ರವಾಸಿ ಬೋಟ್ಗಳಲ್ಲಿ ಲೈಫ್ ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸಿ ತಕ್ಷಣದ ಆದೇಶ ಹೊರಡಿಸಿದ್ದ ಡಿಸಿ ಮತ್ತು ಸಚಿವರಿಂದಲೇ ಸುರಕ್ಷತಾ ಮಾನದಂಡಗಳ ಉಲ್ಲಂಘನೆ ಮಾಡಲಾಗಿದೆ.
ಮೈಸೂರಿನ ಪ್ರವಾಸಿಗರಿದ್ದ ಬೋಟ್ ಅರಬ್ಬಿ ಸಮುದ್ರದ ಅಲೆಗಳಿಗೆ ಸಿಲುಕಿ ಮಗುಚಿದ ಪರಿಣಾಮ ಮೂವರು ಪ್ರಾಣ ಕಳೆದುಕೊಂಡ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಜಿಲ್ಲೆಯಾದ್ಯಂತ ಪ್ರವಾಸಿ ಬೋಟ್ಗಳಲ್ಲಿ ಲೈಫ್ ಜಾಕೆಟ್ ಧರಿಸುವುದನ್ನು ಕಡ್ಡಾಯಗೊಳಿಸಿ ತಕ್ಷಣದ ಆದೇಶ ಹೊರಡಿಸಿದ್ದರು. ಲೈಫ್ ಜಾಕೆಟ್ ಬಳಕೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಕರಪತ್ರಗಳನ್ನು ಹಂಚಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನೂ ನೀಡಿದ್ದರು.
ಆದರೆ ಈ ಆದೇಶ ಹೊರಬಿದ್ದ ಕೆಲವೇ ಕ್ಷಣಗಳಲ್ಲಿ, ಸ್ವತಃ ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ಈ ನಿಯಮವನ್ನು ಗಾಳಿಗೆ ತೂರಿದ್ದಾರೆ. ಗಣರಾಜ್ಯೋತ್ಸವದ ಅಂಗವಾಗಿ ಸೈಂಟ್ ಮೇರಿಸ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಲು ಬೋಟ್ನಲ್ಲಿ ತೆರಳಿದ್ದ ಸಚಿವರು ಮತ್ತು ಅಧಿಕಾರಿಗಳ ತಂಡ ಲೈಫ್ ಜಾಕೆಟ್ ಧರಿಸದೆ ಪ್ರಯಾಣಿಸಿರುವುದು ಈಗ ವಿಡಿಯೋ ಸಮೇತ ಬಯಲಾಗಿದೆ. ದುರಂತ ನಡೆದ ದಿನವೇ ಇಂತಹ ಬೇಜವಾಬ್ದಾರಿ ಪ್ರದರ್ಶಿಸಿರುವುದು ದುರದೃಷ್ಟಕರ.
ಬೋಟ್ನಲ್ಲಿ ನಿಂತು ಕೈಬೀಸುತ್ತಾ ಸಂಭ್ರಮಿಸಿದ ಸಚಿವರು ಮತ್ತು ಜಿಲ್ಲಾಡಳಿತದ ಹಿರಿಯ ಅಧಿಕಾರಿಗಳ ಈ ನಡೆ, ಸಾಮಾನ್ಯ ಜನರಿಗೆ ಮಾತ್ರವೇ ನಿಯಮಗಳು ಸೀಮಿತವೇ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಜನರಿಗೆ ಮಾರ್ಗದರ್ಶನ ನೀಡಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿರುವವರೇ ಸುರಕ್ಷತಾ ಸಾಧನಗಳನ್ನು ನಿರ್ಲಕ್ಷಿಸಿರುವುದು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಜಿಲ್ಲಾಡಳಿತದ ದ್ವಂದ್ವ ನಿಲುವಿನ ವಿರುದ್ಧ ಜನಸಾಮಾನ್ಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
