ಮೈಸೂರು, ಜುಲೈ 16, 2026 : ನಾಳೆ ಆಷಾಢ ಮಾಸದ ಮೊದಲ ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಮೈಸೂರಿನ ಐತಿಹಾಸಿಕ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲು ದೇಗುಲದ ಸಿಬ್ಬಂದಿ ಹಾಗೂ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಅಂತಿಮ ಹಂತದ ಸಿದ್ಧತಾ ಕಾರ್ಯಗಳು ಭರದಿಂದ ಸಾಗಿವೆ.

ನಾಳೆ ದೇಗುಲಕ್ಕೆ ಹರಿದುಬರುವ ಲಕ್ಷಾಂತರ ಭಕ್ತಾದಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ಈ ಬಾರಿ ಕೇವಲ ಧರ್ಮದರ್ಶನ ಮತ್ತು ಎರಡು ಸಾವಿರ ರೂಪಾಯಿಗಳ ವಿಶೇಷ ಟಿಕೆಟ್ ಮೂಲಕ ಮಾತ್ರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಭಕ್ತರ ಸುಗಮ ಸಂಚಾರಕ್ಕಾಗಿ ಖಾಸಗಿ ವಾಹನಗಳ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದ್ದು, ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಮಹಲ್ ಪ್ಯಾಲೇಸ್ ಬಳಿಯಿರುವ ಶಶಿರಂಜನ್ ಮೈದಾನದಿಂದ ಉಚಿತ ಸರ್ಕಾರಿ ಬಸ್ಸುಗಳ ಓಡಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಖಾಸಗಿ ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆಯನ್ನು ಮಾಡಲಾಗಿದೆ.
ದೇಗುಲಕ್ಕೆ ಭೇಟಿ ನೀಡುವ ಭಕ್ತರಿಗಾಗಿ ತಾತ್ಕಾಲಿಕ ಶೌಚಾಲಯ, ಕುಡಿಯುವ ನೀರು, ಕುಂಕುಮ ಪ್ರಸಾದ ಹಾಗೂ ಅನ್ನ ದಾಸೋಹದ ವ್ಯವಸ್ಥೆಗಳನ್ನು ಮಾಡಲಾಗಿದ್ದು, ಬೆಟ್ಟದ ಮೆಟ್ಟಿಲುಗಳ ಮೂಲಕ ನಡೆದು ಬರುವ ಭಕ್ತಾದಿಗಳಿಗೆ ಶಕ್ತಿ ನೀಡಲು ಹಾಲು ಹಾಗೂ ಬಿಸ್ಕೆಟ್ ವಿತರಣೆಗೂ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಗಣ್ಯ ವ್ಯಕ್ತಿಗಳ (ವಿಐಪಿ) ದರ್ಶನಕ್ಕೆ ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಮಾತ್ರ ಸಮಯ ನಿಗದಿಪಡಿಸಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಇಡೀ ಬೆಟ್ಟದಾದ್ಯಂತ ಖಾಕಿ ಕಣ್ಗಾವಲು ಹಾಕಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ಜನರ ಚಲನವಲನಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
