ನಂಜನಗೂಡು, ಫೆಬ್ರವರಿ 2, 2026: ಪಟ್ಟಣ ಪ್ರದೇಶದ ವಿದ್ಯಾರ್ಥಿಗಳಿಗೆ ಕೃಷಿ ಚಟುವಟಿಕೆಗಳ ಬಗ್ಗೆ ಪ್ರಾಯೋಗಿಕ ಜ್ಞಾನ ಮೂಡಿಸುವ ಉದ್ದೇಶದಿಂದ ಮೈಸೂರಿನ ಮಹಾರಾಜ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (NSS) ಶಿಬಿರಾರ್ಥಿಗಳು ಕೆಸರುಗದ್ದೆಗೆ ಇಳಿದು ಭತ್ತದ ನಾಟಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.
ತಾಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಎನ್.ಎಸ್.ಎಸ್ ವಿಶೇಷ ವಾರ್ಷಿಕ ಶಿಬಿರದ ಅಂಗವಾಗಿ ಈ ವಿಶಿಷ್ಟ ಕಾರ್ಯಕ್ರಮ ನಡೆಯಿತು. ಶಿಬಿರಾಧಿಕಾರಿಗಳಾದ ಡಾ. ಪಿ.ಎಸ್. ಮಧುಸೂದನ್ ಮತ್ತು ಡಾ. ಎಸ್. ಕೃಷ್ಣಪ್ಪ ಅವರ ನೇತೃತ್ವದಲ್ಲಿ ಸುಮಾರು 60ಕ್ಕೂ ಹೆಚ್ಚು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಅತ್ಯಂತ ಉತ್ಸಾಹದಿಂದ ಕೃಷಿ ಕಾಯಕದಲ್ಲಿ ಪಾಲ್ಗೊಂಡರು.
ನಗರ ಜೀವನದ ಹಿನ್ನೆಲೆ ಹೊಂದಿರುವ ವಿದ್ಯಾರ್ಥಿಗಳು ರೈತರಂತೆಯೇ ತಲೆಗೆ ಟವಲ್ ಪೇಟ ಸುತ್ತಿಕೊಂಡು, ಸಂತಸದಿಂದಲೇ ಕೆಸರುಗದ್ದೆಗೆ ಇಳಿದು ಭತ್ತದ ಪೈರುಗಳನ್ನು ನಾಟಿ ಮಾಡಿದರು. ಕೃಷಿಯ ಕಷ್ಟ-ಸುಖಗಳನ್ನು ಅರಿಯುವ ವಿದ್ಯಾರ್ಥಿಗಳ ಈ ಪ್ರಯತ್ನಕ್ಕೆ ಬೊಕ್ಕಹಳ್ಳಿ ಗ್ರಾಮಸ್ಥರು ಕೂಡ ಸಾಥ್ ನೀಡಿದರು. ಯುವಜನತೆಯಲ್ಲಿ ಕೃಷಿ ಸಂಸ್ಕೃತಿಯನ್ನು ಉಳಿಸುವ ನಿಟ್ಟಿನಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ತೋರಿದ ಈ ಆಸಕ್ತಿಗೆ ಗ್ರಾಮಸ್ಥರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.
