ಚಾಮರಾಜನಗರ, ಮಾರ್ಚ್ 28, 2026 : ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕೇಂದ್ರವಾದ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ಇಂದು ಹುಂಡಿ ಎಣಿಕೆ ಕಾರ್ಯವು ಯಶಸ್ವಿಯಾಗಿ ನೆರವೇರಿತು.
ಶ್ರೀ ಸಾಲೂರು ಬೃಹನ್ಮಠದ ಅಧ್ಯಕ್ಷರಾದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿಗಳಾದ ಶ್ರೀ ರಘು ಅವರ ನೇತೃತ್ವದಲ್ಲಿ ಬೆಳಿಗ್ಗೆ 7:00 ಗಂಟೆಯಿಂದ ಎಣಿಕೆ ಪ್ರಕ್ರಿಯೆ ಆರಂಭವಾಯಿತು.

ಕಳೆದ 23 ದಿನಗಳ ಅವಧಿಯಲ್ಲಿ ಭಕ್ತರು ಸಮರ್ಪಿಸಿದ ಕಾಣಿಕೆಯ ಮೊತ್ತವು ಹುಂಡಿ ಮತ್ತು ಇ-ಹುಂಡಿ ಸೇರಿದಂತೆ ಒಟ್ಟು ರೂ. 2,33,84,201.00 ಸಂಗ್ರಹವಾಗಿದೆ. ನಗದಿನ ಜೊತೆಗೆ ಭಕ್ತರು ಸ್ವಾಮಿಗೆ 21 ಗ್ರಾಂ ಚಿನ್ನ ಹಾಗೂ 800 ಗ್ರಾಂ ಬೆಳ್ಳಿಯನ್ನು ಕಾಣಿಕೆಯಾಗಿ ಅರ್ಪಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯರಾದ ಮರಿಸ್ವಾಮಿ ಕಾಗಲವಾಡಿ, ಹಣಕಾಸು ಸಲಹೆಗಾರರಾದ ಮಹದೇವು, ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್. ಮತ್ತು ಜಿಲ್ಲಾಡಳಿತದ ಪರವಾಗಿ ಮಹೇಶ್ ಚಂದ್ರ ಉಪಸ್ಥಿತರಿದ್ದರು. ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ಸಿಬ್ಬಂದಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಫ್ ಬರೋಡಾ ಶಾಖೆಯ ಮುಖ್ಯ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಪಾಲ್ಗೊಂಡು ಪ್ರಕ್ರಿಯೆಯನ್ನು ಸುಗಮವಾಗಿ ಪೂರೈಸಿದರು.
