ಮೈಸೂರು, ಏಪ್ರಿಲ್ 17, 2026: ಬೆಂಗಳೂರು ನಗರದಲ್ಲಿ ಒಂದು ಲಕ್ಷಕ್ಕೂ ಅಧಿಕ ಜನರ ಸಮ್ಮುಖದಲ್ಲಿ ಯಶಸ್ವಿಯಾಗಿ ‘ಜನರೊಂದಿಗೆ ಜನತಾದಳ’ ಕಾರ್ಯಕ್ರಮ ನಡೆಸಿದ ಬೆನ್ನಲ್ಲೇ, ನಾಳೆ ಮೈಸೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪದಗ್ರಹಣ ಹಾಗೂ ಜನರೊಂದಿಗೆ ಜನತಾದಳ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಕಾರ್ಯಕರ್ತರನ್ನು ಕರೆಯದೆ, ಕೇವಲ ಚಾಮರಾಜ, ಕೃಷ್ಣರಾಜ ಹಾಗೂ ನರಸಿಂಹರಾಜ ಕ್ಷೇತ್ರಗಳ ಕಾರ್ಯಕರ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಉಳಿದಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಾರ್ಯಕ್ರಮ ನಡೆಸುವ ಕುರಿತು ಈಗಾಗಲೇ ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲೂ ಈ ಅಭಿಯಾನ ನಡೆಯಲಿದೆ. ಅದರಲ್ಲೂ ವಿಶೇಷವಾಗಿ ಮೇ 13ರಂದು ವರುಣ ಕ್ಷೇತ್ರದಲ್ಲಿ ಬೃಹತ್ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಾ.ರಾ. ಮಹೇಶ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅವರು, ರಾಜ್ಯದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಆರೋಪಿಸಿದರು. ಮುಖ್ಯಮಂತ್ರಿಗಳೇ, ನೀವು ಮತ್ತು ನಿಮ್ಮ ಮಗ ಯತೀಂದ್ರ ಮಾತ್ರ ಅಧಿಕಾರದಲ್ಲಿ ಇರಬೇಕೆಂದು ಬಯಸಬೇಡಿ, ಕೂಡಲೇ ಬಾಕಿ ಇರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಚುನಾವಣೆಗಳನ್ನು ನಡೆಸಿ ಎಂದು ಒತ್ತಾಯಿಸಿದರು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ ಅವಧಿಯಲ್ಲೆಲ್ಲಾ ಮಹಾನಗರ ಪಾಲಿಕೆಯಲ್ಲಿ ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಈ ಬಾರಿ ಚುನಾವಣೆ ನಡೆಸಿದರೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತದೆ ಎಂಬ ಭಯದಿಂದಾಗಿ ಅವರು ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹಿಂದೇಟು ಹಾಕುತ್ತಿದ್ದಾರೆ ಎಂದು ಟೀಕಿಸಿದರು.
ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದುವರಿಯುವ ಕುರಿತು ಎಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಚರ್ಚೆಯಾಗಿದೆ. ಮೈಸೂರು ಜಿಲ್ಲೆಯಲ್ಲಿ ಎರಡೂ ಪಕ್ಷಗಳು ಒಟ್ಟಾಗಿಯೇ ಚುನಾವಣೆಯನ್ನು ಎದುರಿಸಲಿವೆ ಎಂದು ಸ್ಪಷ್ಟಪಡಿಸಿದರು. ಇನ್ನು ನಾಳಿನ ಕಾರ್ಯಕ್ರಮಕ್ಕೆ ಜಿ.ಟಿ. ದೇವೇಗೌಡರು ಬರುತ್ತಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪಕ್ಷದ ಮೇಲೆ ನಿಷ್ಠೆ ಇರುವ ಎಲ್ಲಾ ಕಾರ್ಯಕರ್ತರು ಮತ್ತು ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕ್ರಮವು ಕುಮಾರಸ್ವಾಮಿ ಹಾಗೂ ನಿಖಿಲ್ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಲಿದ್ದು, ನಿಷ್ಠಾವಂತರೆಲ್ಲರೂ ಅಲ್ಲಿ ಇರುತ್ತಾರೆ ಎಂದು ಮಾರ್ಮಿಕವಾಗಿ ನುಡಿದರು.
