ಪ್ರತಿನಿಧಿ ವರದಿ ಕೆ.ಆರ್.ನಗರ
ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಜನಪ್ರಿಯ ಯೋಜನೆಗಳು ಮತ್ತು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವ ಮೂಲಕ ಮತ ಕೇಳುವಂತೆ ಶಾಸಕ ಡಿ.ರವಿಶಂಕರ್ ಸಲಹೆ ನೀಡಿದರು.
ಪಟ್ಟಣದ ಕನಕನಗರದಲ್ಲಿರುವ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ. 27 ರಂದು ಆಯೋಜಿಸಲಿರುವ ಬೃಹತ್ ಕಾರ್ಯಕರ್ತರ ಸಮಾವೇಶದ ಹಿನ್ನೆಲೆಯಲ್ಲಿ ಸೋಮವಾರ ಕರೆಯಲಾಗಿದ್ದ ಪಟ್ಟಣದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸುವುದೇ ನಮ್ಮ ಗುರಿಯಾಗಬೇಕೆಂದರು.
ಬೇರೆ ಪಕ್ಷದವರು ಹೇಳುವ ಸುಳ್ಳು ವದಂತಿಗಳಿಗೆ ಕಿವಿ ಕೊಡದೆ, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮತದಾರರಿಗೆ ನೀಡಿದ ಭರವಸೆಯಂತೆ ನುಡಿದಂತೆ ನಡೆದುಕೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಶೀಘ್ರವಾಗಿ ಜಾರಿಗೆ ತರುವ ಮೂಲಕ ಜನಮಾನಸದಲ್ಲಿ ಉಳಿದಿದೆ ಎಂಬುದನ್ನು ಮನದಟ್ಟಾಗುವ ರೀತಿಯಲ್ಲಿ ಕಾರ್ಯಕರ್ತರು ಮತದಾರರಿಗೆ ತಿಳಿಸಬೇಕು ಎಂದು ಕರೆ ನೀಡಿದರು.
ಪಟ್ಟಣಕ್ಕೆ ಈಗಾಗಲೇ ಒಳಚರಂಡಿ, ಕುಡಿಯುವ ನೀರಿನ ಸರಬರಾಜು, ರಸ್ತೆ ಮತ್ತು ಚರಂಡಿಗಳ ಅಭಿವೃದ್ಧಿ, ಉದ್ಯಾನಗಳ ಅಭಿವೃದ್ಧಿ, ಕ್ರೀಡಾಂಗಣ ಅಭಿವೃದ್ಧಿಗೆ ಅನುದಾನ ಸೇರಿದಂತೆ ಹತ್ತಾರು ಅಭಿವೃದ್ಧಿ ಕೆಲಸಗಳಿಗೆ ವಿವಿಧ ಯೋಜನೆ ಯಡಿಯಲ್ಲಿ 60 ಕೋಟಿಗೂ ಹೆಚ್ಚು ಅನುದಾನ ತರಲಾಗಿದೆ ಎಂದರು.
ಪಟ್ಟಣದ ಮೈಸೂರು-ಹಾಸನ ರಾಷ್ಟ್ರೀಯ ಹೆದ್ದಾರಿಯ ಅಗಲೀಕರಣ, ಮಧುವನಹಳ್ಳಿ ಬಡಾವಣೆಯ ರಸ್ತೆ ಅಗಲೀಕರಣ ಮತ್ತು ಅಭಿವೃದ್ಧಿ ಸೇರಿದಂತೆ ಅನೇಕ ಕಾರ್ಯಕ್ರಮಗಳು ಶೀಘ್ರವಾಗಿ ಪ್ರಾರಂಭವಾಗಲಿದ್ದು, ಇವುಗಳನ್ನು ಜನಸಾಮಾನ್ಯರಿಗೆ ಪುರಸಭಾ ಸದಸ್ಯರು ಮತ್ತು ಮುಖಂಡರು ತಿಳಿಸಬೇಕೆಂದರು.
ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷ ಸರಳ, ಸಜ್ಜನಿಕೆಗೆ ಹೆಸರಾದ ಸ್ಟಾರ್ ಚಂದ್ರು ಅವರನ್ನು ಘೋಷಿಸಿದೆ. ನಾವೆಲ್ಲ ಅವರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಮೂಲಕ ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು, ನಮ್ಮ ಸಾಮರ್ಥ್ಯ ಸಾಬೀತುಪಡಿಸಬೇಕು ಎಂದು ಕೋರಿದರು.
ಮಾ. 27 ರಂದು ಪಟ್ಟಣದ ಡಾ.ರಾಜಕುಮಾರ್ ಬಾನಂಗಳದಲ್ಲಿ ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು, ಮುಖಂಡರು ಹಾಗೂ ಕಾರ್ಯಕರ್ತರ ಬೃಹತ್ ಸಮಾವೇಶವನ್ನು ಏರ್ಪಡಿಸಲಾಗಿದ್ದು, ಇದಕ್ಕೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರನ್ನು ಸೇರಿಸಿ ಕಾರ್ಯಕ್ರಮ ಯಶಸ್ವಿಯಾಗುವಂತೆ ಸಹಕರಿಸಬೇಕೆಂದು ತಿಳಿಸಿದರು.
ಪುರಸಭಾ ಮಾಜಿ ಅಧ್ಯಕ್ಷ ನರಸಿಂಹರಾಜು, ಸದಸ್ಯರಾದ ನಟರಾಜು, ಸೈಯದ್ ಸಿದ್ದೀಕ್, ಜಾವೀದ್ ಪಾಷಾ, ನಗರಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎಸ್.ಮಹೇಶ್, ಮುಖಂಡ ಕ್ಯಾರೆನಾಗರಾಜ್, ರಾಜಯ್ಯ, ಚರ್ನಹಳ್ಳಿಶಿವಣ್ಣ, ಕೆ.ಸಿ.ಹರೀಶ್, ವಿನಯ್, ತಿಮ್ಮಶೆಟ್ಟಿ, ಸ್ವಾಮಿನಾಯಕ ಇನ್ನಿತರರು ಮಾತನಾಡಿದರು.
ಪುರಸಭಾ ಸದಸ್ಯ ಕೆ.ಜಿ.ಸುಬ್ರಮಣ್ಯ, ಮಿಕ್ಸರ್ ಶಂಕರ್, ಶಿವುನಾಯಕ್, ಶಂಕರ್ಸ್ವಾಮಿ, ಕಾಂಗ್ರೆಸ್ ನಗರಾಧ್ಯಕ್ಷ ಎಂ.ಜೆ.ರಮೇಶ್, ಮುಖಂಡ ಪ್ರಸನ್ನಕುಮಾರ್, ಸರಿತಾಜವರಪ್ಪ, ಪುಟ್ಟರಾಜು, ಆದರ್ಶ, ರವಿಪೂಜಾರಿ, ಎಂ.ಎ.ನಾಗೇಂದ್ರ, ಸಮಂತ್, ಮಹದೇವ್ ಸೇರಿದಂತೆ ಇನ್ನಿತರರು ಹಾಜರಿದ್ದರು.
25 ಕೆಆರ್ಎನ್-1:- ಕೆ.ಆರ್.ನಗರದ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಕರೆಯಲಾಗಿದ್ದ ಪಟ್ಟಣ ವ್ಯಾಪ್ತಿಯ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರ ಪೂರ್ವಭಾವಿ ಸಭೆಯಲ್ಲಿ ಶಾಸಕ ಡಿ.ರವಿಶಂಕರ್ ಮಾತನಾಡಿದರು. ಕಾಂಗ್ರೆಸ್ ನಗರಾದ್ಯಕ್ಷ ಎಂ.ಜೆ.ರಮೇಶ್, ಪುರಸಭಾ ಮಾಜಿ ಅಧ್ಯಕ್ಷ ನರಸಿಂಹರಾಜು, ಸದಸ್ಯ ಕೆ.ಜಿ.ಸುಬ್ರಮಣ್ಯ, ಮುಖಂಡರಾದ ಚರ್ನಹಳ್ಳಿಶಿವಣ್ಣ, ಕ್ಯಾರೆನಾಗರಾಜ್, ತಿಮ್ಮಶೆಟ್ಟಿ, ವಿನಯ್ ಇನ್ನಿತರರು ಇದ್ದರು.
