ಕೆ.ಆರ್. ನಗರ, ನವೆಂಬರ್ 18, 2025 : ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮದ ವೇದಿಕೆಯ ಮೇಲೆ, ತನ್ನದೇ ಪಕ್ಷದ ಕಾರ್ಯಕರ್ತನಿಗೆ ಶಾಸಕ ಡಿ. ರವಿಶಂಕರ್ ಅವರು ಕಪಾಳಮೋಕ್ಷ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಕೆ.ಆರ್. ನಗರ ತಾಲ್ಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಈ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೆ.ಆರ್. ನಗರ ತಾಲೂಕಿನ ದೊಡ್ಡೇಕೊಪ್ಪಲು ಗ್ರಾಮದಲ್ಲಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇದಿಕೆಯಲ್ಲಿದ್ದ ಕಾಂಗ್ರೆಸ್ ಮುಖಂಡ ಮಹದೇವು ಎಂಬುವವರು, ಗ್ರಾಮಕ್ಕೆ ಡೈರಿ ಕಟ್ಟಡವನ್ನು ನಿರ್ಮಿಸಿಕೊಡುವಂತೆ ಶಾಸಕರ ಬಳಿ ಮನವಿ ಮಾಡಿದರು ಎನ್ನಲಾಗಿದೆ. ಈ ಮನವಿಯಿಂದ ಕೆರಳಿದ ಶಾಸಕ ಡಿ. ರವಿಶಂಕರ್ ಅವರು, ಮಹದೇವು ಅವರ ಕಪಾಲಕ್ಕೆ ಹೊಡೆದಿದ್ದಾರೆ. ಅಲ್ಲದೆ, “ಸುಮ್ಮನೆ ಹಿಂದೆ ಕುಳಿತುಕೋ” ಎಂದು ಆವಾಜ್ ಹಾಕಿದ್ದಾರೆ.
ತಮ್ಮದೇ ಪಕ್ಷದ ಕಾರ್ಯಕರ್ತನಿಗೆ ಶಾಸಕರು ಸಾರ್ವಜನಿಕವಾಗಿ ಹೊಡೆಯುವ ದೃಶ್ಯ ಸ್ಥಳದಲ್ಲಿದ್ದವರ ಮೊಬೈಲ್ನಲ್ಲಿ ಸೆರೆಯಾಗಿದ್ದು, ಈ ವಿಡಿಯೋ ಪ್ರಸ್ತುತ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಶಾಸಕರ ವರ್ತನೆಗೆ ಸಾರ್ವಜನಿಕ ವಲಯದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
