ಮೈಸೂರು, ಡಿಸೆಂಬರ್ 9, 2025 : ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ವತಿಯಿಂದ ಇಂದು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ಮೈಸೂರು ನಗರ ಮತ್ತು ಗ್ರಾಮಾಂತರ ಬಿಜೆಪಿ ಘಟಕಗಳು ಜಂಟಿಯಾಗಿ ಈ ಪ್ರತಿಭಟನೆಯನ್ನು ಆಯೋಜಿಸಿದ್ದವು.

ಮೈಸೂರಿನ ಕಾಡಾ ಕಚೇರಿ ಆವರಣದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಾರ್ಯಕರ್ತರು ಧಿಕ್ಕಾರಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಸರ್ಕಾರದ ಕ್ರಮಗಳಿಂದ ರೈತರಿಗೆ ಆಗುತ್ತಿರುವ ಅನ್ಯಾಯವನ್ನು ತಕ್ಷಣ ಸರಿಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಶಾಸಕ ಹರ್ಷವರ್ಧನ್, ಒಳ ಮೀಸಲಾತಿ ನೀಡುವುದು ಸಂವಿಧಾನ ಬಾಹಿರ. ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡಲು ಮುಂದಾಗಿರುವುದು ಸಂವಿಧಾನ ವಿರೋಧಿ ನಡೆಯಾಗಿದೆ. ನಮ್ಮ ಸಂವಿಧಾನದ ಪ್ರಕಾರ ಕೇವಲ ಮೀಸಲಾತಿ ನೀಡಲು ಮಾತ್ರ ಅವಕಾಶವಿದೆ. ಒಳ ಮೀಸಲಾತಿ ನೀಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಒಳ ಮೀಸಲಾತಿ ನೀಡುತ್ತೇವೆಂದು ಹೇಳುವ ಮೂಲಕ ಶೋಷಿತ ಸಮುದಾಯಗಳಿಗೆ ಅನ್ಯಾಯ ಮಾಡುತ್ತಿದೆ. ಅಲೆಮಾರಿ ಸೇರಿದಂತೆ ಹಲವು ಹಿಂದುಳಿದ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ರಾಜ್ಯ ಸರ್ಕಾರ ಸರಿ ಪಡಿಸಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಹರ್ಷವರ್ಧನ್, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ರಾಜ್ಯ ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ, ಮಾಜಿ ಮೇಯರ್ ಶಿವಕುಮಾರ್, ಮಾಜಿ ಜಿಲ್ಲಾ ಪಂಚಾಯತಿ ಸದಸ್ಯ ಸದಾನಂದ, ಮಾಜಿ ನಗರಪಾಲಿಕೆ ಸದಸ್ಯ ಪ್ರಶಾಂತ್ ಗೌಡ ಇವರ ಜೊತೆಗೆ ಪಕ್ಷದ ಹಲವು ಮಹಿಳಾ ಕಾರ್ಯಕರ್ತರು ಸೇರಿದಂತೆ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು. ಪ್ರತಿಭಟನೆಯುದ್ದಕ್ಕೂ ರಾಜ್ಯ ಸರ್ಕಾರದ ರೈತಪರ ಕಾಳಜಿಯ ಕೊರತೆಯ ಬಗ್ಗೆ ನಾಯಕರು ಟೀಕಿಸಿದರು.
