ಸಹಾಯಕ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಮನವಿ
ಪ್ರತಿನಿಧಿ ವರದಿ ಕೃಷ್ಣರಾಜಪೇಟೆ
ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಕೃಷ್ಣರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಸಹಾಯಕ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಮನವಿ ಮಾಡಿದರು.
ಕೃಷ್ಣರಾಜಪೇಟೆ ಪಟ್ಟಣದ ತಾಲೂಕು ಆಡಳಿತ ಕಾರ್ಯಸೌಧದ ಸಭಾಂಗಣದಲ್ಲಿ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ಕೆ.ಆರ್.ಪೇಟೆ ತಾಲೂಕಿನ ೨೬೧ ಮತಗಟ್ಟೆಗಳ ವ್ಯಾಪ್ತಿಯಲ್ಲಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದರು.
ಮತದಾರರ ಪಟ್ಟಿಯ ಲೋಪದೋಷಗಳನ್ನು ಸರಿಪಡಿಸಲು ಹೆಸರು ನೋಂದಾಯಿಸಲು, ತಿದ್ದುಪಡಿಗೆ ಮನವಿ ಸಲ್ಲಿಸಲು ಮಾ.೨೫ರ ಒಳಗೆ ಅವಕಾಶ ನೀಡಲಾಗಿದೆ. ಆದ್ದರಿಂದ ಸಾರ್ವಜನಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರಿರುವ ಬಗ್ಗೆ ಖಾತರಿ ಪಡಿಸಿಕೊಂಡು ತಿದ್ದುಪಡಿ ಸೇರಿದಂತೆ ಸಣ್ಣಪುಟ್ಟ ಬದಲಾವಣೆಗಳಿದ್ದರೆ ತಮ್ಮ ಬೂತ್ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಬೇಕು ಎಂದರು.
ಪ್ರಸ್ತುತ ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಕ್ರಮಗಳು ನಡೆಯದಂತೆ ಎಚ್ಚರ ವಹಿಸಲಾಗಿದೆ. ತಾಲೂಕಿನ ಚನ್ನರಾಯಪಟ್ಟಣ ರಸ್ತೆಯ ಆನೆಗೊಳ ಕೆ.ಆರ್.ನಗರ ರಸ್ತೆಯ ಭೇರ್ಯ ಸಮೀಪದ ಸಿಂಗನಹಳ್ಳಿ ಗ್ರಾಮದ ಬಳಿ ಹಾಗೂ ಶ್ರವಣಬೆಳಗೊಳ ಸಮೀಪದ ಅಘಲಯ ಗ್ರಾಮದಲ್ಲಿ ಚೆಕ್ಪೋಸ್ಟ್ ಸ್ಥಾಪಿಸಲಾಗಿದೆ. ಅಕ್ರಮವಾಗಿ ಹಣ, ಮದ್ಯ ಸಾಗಿಸುವುದು ಸೇರಿದಂತೆ ಅಕ್ರಮ ವ್ಯವಹಾರಗಳ ಬಗ್ಗೆ ಹದ್ದಿನಕಣ್ಣು ಇಡಲಾಗಿದೆ. ತಾಲೂಕಿನ ವ್ಯಾಪ್ತಿಯಲ್ಲಿ ಚುನಾವಣಾ ಅಕ್ರಮಗಳು ನಡೆಯುತ್ತಿರುವುದು ಏನಾದರೂ ಕಂಡು ಬಂದರೆ ಸಾರ್ವಜನಿಕರು ಚುನಾವಣಾ ಶಾಖೆ ಅಥವಾ ತಾಲೂಕು ಕಚೇರಿಗೆ ಇಲ್ಲವೇ ಪೊಲೀಸರಿಗೆ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಹಾಯಕ ಚುನಾವಣಾಧಿಕಾರಿ ಡಾ.ಲೋಕೇಶ್, ಶಿರಸ್ತೇದಾರ್ ರವಿ, ಚುನಾವಣಾ ಶಾಖೆಯ ಶಿರಸ್ತೇದಾರ್ ಹರೀಶ್ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ರಾಜಸ್ವ ನಿರೀಕ್ಷಕರು, ಕಂದಾಯ ಗ್ರಾಮ ಲೆಕ್ಕಾಧಿಕಾರಿಗಳು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಸ್ಥಿತರಿದ್ದರು.
ಚಿತ್ರಶೀರ್ಷಿಕೆ: ೧೯-ಏಖPಇಖಿಇ-೦೧ ಕೆ.ಆರ್.ಪೇಟೆ ಪಟ್ಟಣದ ತಾಲೂಕು ಆಡಳಿತ ಕಾರ್ಯಸೌಧದ ಸಭಾಂಗಣದಲ್ಲಿ ಸಹಾಯಕ ಚುನಾವಣಾಧಿಕಾರಿ ಆರ್.ಚಂದ್ರಯ್ಯ ಮಾತನಾಡಿದರು. ಸಹಾಯಕ ಚುನಾವಣಾಧಿಕಾರಿ ಡಾ.ಲೋಕೇಶ್ ಇದ್ದರು.