ವೈಜ್ಞಾನಿಕ ಕೃಷಿ, ಸಮರ್ಪಕ ಯಾಂತ್ರೀಕರಣ, ಸಮಗ್ರ ಬೇಸಾಯ ಪದ್ದತಿ ಅಳವಡಿಕೆ ರೈತರ ಆರ್ಥಿಕತೆ ಹೆಚ್ಚಿಸಲಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ. ಪೊನ್ನಂಪೇಟೆಯ ಕೂರ್ಗ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಯಲ್ಲಿ ಏರ್ಪಡಿಸಿರುವ ಮೂರು ದಿನಗಳ ಕೃಷಿ ಯಂತ್ರ ಮೇಳ ಉದ್ಘಾಟಿಸಿ ಮಾತನಾಡಿದ ಅವರು, ಜನಸಾಮಾನ್ಯರು, ಕೃಷಿಕರ ಶ್ರೇಯೋಭಿವೃದ್ದಿ ನಮ್ಮ ಸರ್ಕಾರದ ಆದ್ಯತೆ ಎಂದರು.
ರಾಜ್ಯದ ಸರ್ಕಾರದ ಕೃಷಿಕರ ಅನುಕೂಲಕ್ಕಾಗಿ 600ಕ್ಕೂ ಹೆಚ್ಚು ಯಂತ್ರಧಾರೆ ಕೇಂದ್ರಗಳನ್ನು ತೆರದಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚು ಯಂತ್ರೀಕರಣ ಪ್ರೋತ್ಸಾಹ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದರು. ರಾಜ್ಯದಲ್ಲಿ ಹೈಟೆಕ್ ಕಟಾವು ಹಬ್ ಸ್ಥಾಪನೆಗೆ 50 ಕೋಟಿ ಮೀಸಲಿರಿಸಲಾಗಿದ್ದು 70:30ರ ಸಹಾಯಧನ ಬಂಡವಾಳ ಹೂಡಿಕೆ ಅನುಪಾತದಲ್ಲಿ ರೈತರೇ ಇದನ್ನು ಸ್ಥಾಪಿಸಿ ನಡೆಸಬಹುದಾಗಿದೆ ಎಂದು ಸಚಿವರು ಹೇಳಿದರು.
ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಸಚಿವ ಭೇಟಿ
ಪೊನ್ನಂಪೇಟೆಯ ಹುದ್ದೂರು ಗ್ರಾಮದಲ್ಲಿ ಕೃಷಿ ಪ್ರಶಸ್ತಿ ವಿಜೇತ ರವಿಶಂಕರ್ ಅವರ ಸಸ್ಯ ತಳಿ ಸಂರಕ್ಷಣಾ ಕ್ಷೇತ್ರಕ್ಕೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಭೇಟಿ ನೀಡಿ ವಿವಿಧ ತಳಿಯ ಭತ್ತದ ಬೆಳೆ ವೀಕ್ಷಿಸಿದರು.
ಕೊಡಗು ಜಿಲ್ಲೆಯಲ್ಲಿ ವಾಣಿಜ್ಯ ಬೆಳೆಗಳಿಗೆ ಆದ್ಯತೆ ಸಿಗುತ್ತಿರುವಾಗ ವಿವಿಧ ತಳಿಗಳ ಭತ್ತ ಬೆಳೆಯುತ್ತಿರುವ ರವಿಶಂಕರ್ ಮತ್ತು ಅವರ ಸಹೋದರರ ಕಾಳಜಿ ಬಗ್ಗೆ ಕೃಷಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ, ಕೃಷಿ ನಿರ್ದೇಶಕ ಡಾ. ಜಿ.ಟಿ.ಪುತ್ರ ಮತ್ತಿತರರು ಇದ್ದರು.