ಬೆಂಗಳೂರು, ನವೆಂಬರ್ 22, 2025 : ರಾಜ್ಯ ರಾಜಕಾರಣದಲ್ಲಿ ಪವರ್ ಶೇರಿಂಗ್ ಸಂಬಂಧವಾಗಿ ಭಾರೀ ಚರ್ಚೆಯಾಗುತ್ತಿದೆ. ಕಾಂಗ್ರೆಸ್ ಪಾಳಯದಲ್ಲಿ ಕಂಪನದ ಮುನ್ಸೂಚನೆ ಸಿಗುತ್ತಿದ್ದು, ಚಟುವಟಿಕೆ ಗರಿಗೆದರಿದೆ.
ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತ ಬಳಗದೊಂದಿಗೆ ಔತಣ ಕೂಟ ಆಯೋಜಿಸಿದ್ದಾರೆ. ಸಚಿವರು ತಮ್ಮ ಸ್ಥಾನಮಾನವನ್ನು ಹೇಗೆ ಬಲಪಡಿಸಿಕೊಳ್ಳಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ನಡೆಯುತ್ತದೆ.ಜತೆಗೆ ಮುಂದಿನ ರಾಜಕೀಯ ತಂತ್ರಗಾರಿಕೆ ಬಗ್ಗೆ ಸಿಎಂ ಸಮಾಲೋಚನೆ ನಡೆಯಲಿದೆ ಎನ್ನಲಾಗಿದೆ.
ಇನ್ನು, ಇಂದು ಸಂಜೆಯೇ ಸಿಎಂ ಸಿದ್ದರಾಮಯ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸದಾಶಿವನಗರದಲ್ಲಿರುವ ನಿವಾಸದಲ್ಲಿ ಭೇಟಿ ನೀಡಲಿದ್ದಾರೆ. ಈ ವೇಳೆ ಮಹತ್ವದ ಮಾತುಕತೆ ನಡೆಯಲಿದೆ. ಪ್ರಮುಖವಾಗಿ ಡಿಕೆಶಿಗೆ ಅಧಿಕಾರ ಹಸ್ತಾಂತರ ಜತೆಗೆ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ನಡೆಯಲಿದೆ.
ಅಧಿಕಾರ ಹಸ್ತಾಂತರದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾಳಯದಲ್ಲಿ ಗೊಂದಲಗಳು ನಿರ್ಮಾಣವಾಗಿದೆ. ಒಂದೆಡೆ ಡಿಸಿಎಂ ಡಿಕೆಶಿ ಅವರ ಆಪ್ತ ಶಾಸಕರು ದೆಹಲಿಗೆ ದೌಡಾಯಿಸಿದ್ದಾರೆ. ಅಲ್ಲಿ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರಚನೆ ಸಂಬಂಧ ಚರ್ಚೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
ಇನ್ನು, ರಾಜ್ಯ ಕಾಂಗ್ರೆಸ್ ನಾಯಕರಿಗೆ ಯಾವುದೇ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್ನಿಂದ ಸೂಚನೆ ಇದ್ದರೂ ಕೂಡ ನಾಯಕತ್ವ ಬದಲಾವಣೆಯ ಬಗ್ಗೆ ಆಗಾಗ್ಗೆ ಹೇಳಿಕೆಗಳು ಬರುತ್ತಿರುವುದು ಪಕ್ಷದೊಳಗೆ ಬಿಕ್ಕಟ್ಟನ್ನು ಇನ್ನಷ್ಟು ಹೆಚ್ಚಿಸಿದೆ. ಸಚಿವರಾದ ಸತೀಶ್ ಜಾರಕಿಹೊಳಿ, ಪರಮೇಶ್ವರ್, ಮಹಾದೇವಪ್ಪ ಸೇರಿದಂತೆ ಸಿದ್ದರಾಮಯ್ಯ ಅವರ ಆಪ್ತ ವಲಯದ ಸಚಿವರು ಐದು ವರ್ಷಗಳ ಕಾಲ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎಂದು ಒತ್ತಾಯ ಹಾಕ್ತಿದ್ದಾರೆ.
