ಮೈಸೂರು, ಜನವರಿ 7, 2026 : ದೀರ್ಘಾವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರಿಂದ ರಾಜ್ಯಕ್ಕೆ ಅಥವಾ ಅವರ ಸ್ವಂತ ತವರೂರಿಗೆ ಯಾವುದೇ ಗಮನಾರ್ಹ ಕೊಡುಗೆ ಸಿಕ್ಕಿಲ್ಲ. ದೇವರಾಜ ಅರಸು ಅವರು ಮಾಡಿದ ಕ್ರಾಂತಿಕಾರಿ ಕೆಲಸಗಳನ್ನು ಜನ ಇಂದಿಗೂ ನೆನೆಯುತ್ತಾರೆ, ಆದರೆ ಸಿದ್ದರಾಮಯ್ಯ ಅವರ ವಿಷಯದಲ್ಲಿ ಅಂತಹ ಅಭಿವೃದ್ಧಿ ಕಾಣುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರನ್ನು ಸಂಸದ ಯದುವೀರ್ ಟೀಕಿಸಿದ್ದಾರೆ.
ಮುಂದವರೆದು ಮಾತನಾಡಿದ ಅವರು, ಹುಬ್ಬಳ್ಳಿಯಲ್ಲಿ ಮಹಿಳೆಯ ಮೇಲೆ ನಡೆದ ಹಲ್ಲೆ ಪ್ರಕರಣ ಅತ್ಯಂತ ಖಂಡನೀಯ. ರಾಜ್ಯದಲ್ಲಿ ಮಹಿಳೆಯರಿಗೆ ಗೌರವ ನೀಡುವ ಅಗತ್ಯವಿದೆ. ಅಲ್ಲದೆ, ರಾಜ್ಯದ ಅಧಿಕಾರಿಗಳು ಕಾಂಗ್ರೆಸ್ ಸರ್ಕಾರದ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ ಮತ್ತು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ನೇರವಾಗಿ ಆರೋಪಿಸಿದ್ದಾರೆ.
ಗ್ಯಾರೆಂಟಿ ಯೋಜನೆಗಳ ವೈಫಲ್ಯ: ಸರ್ಕಾರದ ಗ್ಯಾರೆಂಟಿ ಯೋಜನೆಗಳ ಬಗ್ಗೆ ತಕರಾರಿಲ್ಲದಿದ್ದರೂ, ಅವುಗಳ ಅನುಷ್ಠಾನ ಸರಿಯಾಗಿಲ್ಲ ಎಂದು ಅವರು ದೂರಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಹಣ ಸರಿಯಾಗಿ ತಲುಪುತ್ತಿಲ್ಲ, ಯುವನಿಧಿ ಇನ್ನೂ ಜಾರಿಯಾಗಿಲ್ಲ, ಉಚಿತ ಬಸ್ ಯೋಜನೆಯಿಂದ ಕೆಎಸ್ಆರ್ಟಿಸಿ ನಷ್ಟದಲ್ಲಿದೆ ಮತ್ತು ವಿದ್ಯುತ್ ದರ ಏರಿಕೆಯ ಮೂಲಕ ಜನರಿಂದಲೇ ಹಣ ವಸೂಲಿ ಮಾಡಲಾಗುತ್ತಿದೆ ಎಂದು ಅವರು ಟೀಕಿಸಿದ್ದಾರೆ.
ಸಿಎಂ ಬದಲಾವಣೆ ಮತ್ತು ಬಳ್ಳಾರಿ ಗಲಾಟೆ : ಸಿಎಂ ಬದಲಾವಣೆ ಎಂಬುದು ಕಾಂಗ್ರೆಸ್ನ ಆಂತರಿಕ ವಿಷಯವಾಗಿದ್ದರೂ, ಬದಲಾವಣೆಯಿಂದ ಜನರಿಗೆ ಒಳ್ಳೆಯದಾಗುತ್ತದೆ ಎಂಬ ನಂಬಿಕೆ ತಮಗಿಲ್ಲ ಎಂದಿದ್ದಾರೆ. ಇನ್ನು ಬಳ್ಳಾರಿಯ ಗಲಾಟೆಯ ಕುರಿತು ಪ್ರತಿಕ್ರಿಯಿಸಿದ ಅವರು, ಉದ್ದೇಶಪೂರ್ವಕವಾಗಿ ಪ್ರಚೋದನೆ ನೀಡಿ ಗಲಭೆ ಎಬ್ಬಿಸಲಾಗುತ್ತಿದೆ ಎಂದು ದೂರಿದ್ದಾರೆ. ಸಮಸ್ಯೆಗಳನ್ನು ಮುಚ್ಚಿಹಾಕಲು ಸರ್ಕಾರ ಇಂತಹ ಪ್ರಯತ್ನಗಳಿಗೆ ಮುಂದಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರತಾಪ್ ಸಿಂಹ ಮತ್ತು ಪಕ್ಷದ ಶಿಸ್ತು: ಮಾಜಿ ಸಂಸದ ಪ್ರತಾಪ್ ಸಿಂಹ ಅವರ ರಾಜ್ಯ ರಾಜಕಾರಣದ ಎಂಟ್ರಿ ಬಗ್ಗೆ ಪ್ರತಿಕ್ರಿಯಿಸಿದ ಯದುವೀರ್, ಯಾರೇ ಆದರೂ ಪಕ್ಷದ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿರಬೇಕು ಎಂದಿದ್ದಾರೆ. ಅಭ್ಯರ್ಥಿಗಳ ಆಯ್ಕೆ ಮತ್ತು ಟಿಕೆಟ್ ಹಂಚಿಕೆ ವಿಷಯದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಪಕ್ಷದ ಗೆಲುವಿಗಾಗಿ ಎಲ್ಲರೂ ಒಗ್ಗೂಡಿ ಕೆಲಸ ಮಾಡುವುದು ಮುಖ್ಯ ಎಂದು ಅವರು ಹೇಳಿದ್ದಾರೆ.
