ಮೈಸೂರು, ನವೆಂಬರ್ 4, 2025 : ಸಿಎಂ ಸಿದ್ದರಾಮಯ್ಯ ಅವರು ಇಂದು ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಂದ ಅಂತರ ಕಾಯ್ದುಕೊಂಡಿದ್ದು, ರಾಜ್ಯ ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಪ್ರತಿ ಬಾರಿಯೂ ಮೈಸೂರಿಗೆ ಆಗಮಿಸಿದಾಗ ಮಾಧ್ಯಮಗಳೊಂದಿಗೆ ಸೌಹಾರ್ದಯುತವಾಗಿ ಮಾತನಾಡಿ ತೆರಳುತ್ತಿದ್ದ ಸಿಎಂ ಸಿದ್ದರಾಮಯ್ಯ, ಇಂದು ಮಾತ್ರ ಸುದ್ದಿಗಾರರತ್ತ ತಿರುಗಿಯೂ ನೋಡದೆ ತಮ್ಮ ಮನೆಯಿಂದ ಹೊರಟಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಈ ನಿರ್ಧಾರಕ್ಕೆ ಅಧಿಕಾರ ಹಂಚಿಕೆ ಕುರಿತ ಪ್ರಶ್ನೆಗಳೇ ಕಾರಣ ಎನ್ನಲಾಗಿದೆ. ನಿನ್ನೆ (ಸೋಮವಾರ) ಕೂಡ ಮೈಸೂರಿನಲ್ಲಿ ಅಧಿಕಾರ ಹಂಚಿಕೆ ಕುರಿತಂತೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗಲಿಬಿಲಿಗೊಂಡು, ಮಾಧ್ಯಮಗಳ ಮೇಲೆ ಗರಂ ಆಗಿದ್ದರು. ಆ ಘಟನೆಯ ಬೆನ್ನಲ್ಲೇ ಇಂದು ಕೂಡ ಸಿಎಂ ಅವರು ಮಾಧ್ಯಮ ಪ್ರತಿನಿಧಿಗಳ ಬಳಿ ಸುಳಿಯಲಿಲ್ಲ. ಮನೆ ಬಳಿ ಜಮಾಯಿಸಿದ್ದ ಸಾರ್ವಜನಿಕರಿಂದ ಮನವಿಗಳನ್ನು ಸ್ವೀಕರಿಸಿದ ಮುಖ್ಯಮಂತ್ರಿಗಳು, ಮಾಧ್ಯಮದವರತ್ತ ಒಮ್ಮೆಯೂ ತಿರುಗಿಯೂ ನೋಡದೆ ತರಾತುರಿಯಲ್ಲಿ ತಮ್ಮ ಮನೆಯಿಂದ ತೆರಳಿದರು.
ಮಾಧ್ಯಮಗಳೊಂದಿಗೆ ಮಾತನಾಡುವುದರಿಂದ ಸಿಎಂ ಸಿದ್ದರಾಮಯ್ಯ ಅವರು ದೂರ ಉಳಿದಿರುವುದು, ರಾಜ್ಯ ಕಾಂಗ್ರೆಸ್ನಲ್ಲಿ ಚರ್ಚೆಯಲ್ಲಿರುವ ಅಧಿಕಾರ ಹಂಚಿಕೆಯ ಪ್ರಶ್ನೆಗಳಿಂದ ಅವರು ಬೇಸರಗೊಂಡಿದ್ದಾರೆ ಅಥವಾ ಆ ಪ್ರಶ್ನೆಗಳನ್ನು ಎದುರಿಸಲು ಇಷ್ಟಪಡುತ್ತಿಲ್ಲ ಎಂಬ ಅನುಮಾನಗಳಿಗೆ ಕಾರಣವಾಗಿದೆ.
