ಮೈಸೂರು, ನವೆಂಬರ್ 26, 2025 :ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಇಂದು (ನವೆಂಬರ್ 26) ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಸಂವಿಧಾನ ದಿನಾಚರಣೆ ಅಂಗವಾಗಿ ಸಂವಿಧಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಇಂದು ಬೆಳಗ್ಗೆ 09 ಗಂಟೆಗೆ ಪುರಭವನ ಮುಂಭಾಗದಲ್ಲಿರುವ ಭಾರತರತ್ನ ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡುವ ಮೂಲಕ ಜಾಥಾಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಜಾಥಾದಲ್ಲಿ ನಂತರ ಜಾಥಾವು ಕಲಾಮಂದಿರ ತಲುಪಿತು.
ಸಂವಿಧಾನ ದಿನಾಚರಣೆಯ ಮುಖ್ಯ ವೇದಿಕೆ ಕಾರ್ಯಕ್ರಮವನ್ನು ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸಂವಿಧಾನದ ಮಹತ್ವ, ಡಾ. ಅಂಬೇಡ್ಕರ್ ಅವರ ಕೊಡುಗೆ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಗಣ್ಯರು ಮಾತನಾಡಿದರು.ಸಮಾಜದಲ್ಲಿ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಸಮಾನತೆಯ ನ್ಯಾಯ ಕಲ್ಪಿಸಿ ಕೊಡುವುದಕ್ಕೆ ನಮ್ಮ ಸಂವಿಧಾನದಿಂದ ಮಾತ್ರ ಸಾಧ್ಯ ಎಂದು ವಿಧಾನ ಪರಿಷತ್ ನ ಸದಸ್ಯರಾದ ಸಿ. ಎನ್ ಮಂಜೇಗೌಡ ಅವರು ಹೇಳಿದರು.
ಇಂದು ನಾನು ವಿಧಾನ ಪರಿಷತ್ ಸದಸ್ಯ ನಾಗಿ ಅಧಿಕಾರಿಗಳೊಂದಿಗೆ ವೇದಿಕೆ ಹಂಚಿಕೊಂಡಿದ್ದೇನೆ ಎಂದರೆ ಅದು ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಿಂದ ಮಾತ್ರ ಸಾಧ್ಯವಾಗಿದೆ. ಹಾಗಾಗಿ ಸಂವಿಧಾನ ಎಲ್ಲರಿಗೂ ಸಮಾನತೆ ನೀಡಿದೆ. ಅದರಿಂದಲೇ ಎಲ್ಲರ ಮನದಲ್ಲೂ ಅಂಬೇಡ್ಕರ್ ನೆಲೆಸಿದ್ದಾರೆ ಎಂದು ಹೇಳಿದರು.
ಸಂವಿಧಾನ ರಚನೆ ಮಾಡದೆ ಇದ್ದಿದ್ದರೆ ನಾವು ಯಾರು ಬದುಕಲು ಸಾಧ್ಯವಾಗುತ್ತಿರಲಿಲ್ಲ. ಮಹಿಳೆಯರು, ಹಿಂದುಳಿದ ಸಮುದಾಯದವರು ಯಾರು ಸಹ ಶಿಕ್ಷಣ ಪಡೆಯಲು ಸಾಧ್ಯವಾಗುತ್ತಿರಲಿಲ್ಲ, ಹೆಣ್ಣು ಮಕ್ಕಳು ಸ್ವತಂತ್ರವಾಗಿ ಶಿಕ್ಷಣವನ್ನು ಪಡೆದುಕೊಳ್ಳುವುದಕ್ಕೆ ಅಂಬೇಡ್ಕರ್ ಅವರು ಕೊಟ್ಟಿರುವ ಸಂವಿಧಾನವೇ ಕಾರಣ ಎಂದು ತಿಳಿಸಿದರು.
ಈ ದೇಶದಲ್ಲಿ ಅಂಬೇಡ್ಕರ್ ಅವರು ಓದಿರುವ ಪದವಿಗಳನ್ನು ಪರಿಗಣಿಸಿ ಅವರಿಗೆ ಸಂವಿಧಾನ ರಚಿಸುವ ಜವಾಬ್ದಾರಿ ನೀಡಲಾಯಿತು. ಯಾರೂ ಹೆಚ್ಚು ಶಿಕ್ಷಣ ಪಡೆಯುತ್ತಾರೋ ಅವರೇ ನಾಯಕರಾಗುತ್ತಾರೆ ಎನ್ನುವುದಕ್ಕೆ ಉದಾಹರಣೆಯಾಗಿದ್ದಾರೆ, ಇಂದು ಇಡೀ ಪ್ರಪಂಚದಲ್ಲಿ ಅತಿ ಹೆಚ್ಚು ಪ್ರತಿಮೆ ಇರುವುದು ಡಾ: ಬಿ.ಆರ್ ಅಂಬೇಡ್ಕರ್ ಅವರದ್ದು ಮಾತ್ರ. ಹಾಗಾಗಿ ಆ ಮಹಾನಾಯಕ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪ್ರತಿಯೊಬ್ಬರು ತಮ್ಮ ಮನೆಗಳಲ್ಲಿ ಹಾಕಬೇಕು ಅದೇ ನಾವು ಅವರಿಗೆ ಕೊಡುವ ಗೌರವ ಎಂದು ಹೇಳಿದರು.
ಜಾಥಾ ಗೆ ಚಾಲನೆ ಇಂದು ಪುರಭವನ ಮುಂಭಾಗ ಇರುವ ಡಾ. ಬಿ. ಆರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಸಂವಿಧಾನ ಜಾಗೃತಿ ಜಾಥಾಗೆ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್, ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಟಿ. ಎಸ್.ಶ್ರೀವತ್ಸ, ವಿಧಾನ ಪರಿಷತ್ ನ ಸದಸ್ಯರಾದ ಸಿ. ಎನ್. ಮಂಜೇಗೌಡ, ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಎಸ್.ಯುಕೇಶ್ ಕುಮಾರ್, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶೇಖ್ ತನ್ವೀರ್ ಅಸೀಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ವಿಷ್ಣುವರ್ಧನ . ಎನ್, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ. ಬಿ, ಅವರು ಸೇರಿದಂತೆ ಮತ್ತಿತರರು ಹಾಜರಿದ್ದರು.
