ಮೈಸೂರು, ಜುಲೈ 3, 2026 : ಸುಪ್ರೀಂಕೋರ್ಟ್ನ ಇತ್ತೀಚಿನ ಮಾರ್ಗಸೂಚಿಗಳ ಅನ್ವಯ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿರುವ ಮಾದರಿಯಲ್ಲೇ ಮೈಸೂರಿನಲ್ಲೂ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.
ಸುಪ್ರೀಂಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸಚಿವ ಕೃಷ್ಣ ಬೈರೇಗೌಡ ಅವರ ಸೂಚನೆಯಂತೆ ಬೆಂಗಳೂರಿನಲ್ಲಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಭರದಿಂದ ನಡೆಯುತ್ತಿದ್ದು, ಇದಕ್ಕೆ ಪಕ್ಷಾತೀತವಾಗಿ ಬೆಂಬಲ ವ್ಯಕ್ತವಾಗಿದೆ. ಆದರೆ ಮೈಸೂರಿನಲ್ಲಿ ಇನ್ನೂ ಅಧಿಕಾರಿಗಳು ಫುಟ್ಪಾತ್ ಒತ್ತುವರಿ ತೆರವಿಗೆ ಮುಂದಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.

ನಗರದ ಸಯ್ಯಾಜಿರಾವ್ ರಸ್ತೆ, ಗಾಂಧೀ ವೃತ್ತ ಸೇರಿದಂತೆ ಹೃದಯಭಾಗದ ಹಲವು ಪ್ರದೇಶಗಳಲ್ಲಿ ಫುಟ್ಪಾತ್ಗಳನ್ನು ಅತಿಕ್ರಮಿಸಿಕೊಂಡು ವ್ಯಾಪಾರ-ವಹಿವಾಟು ನಡೆಸಲಾಗುತ್ತಿದೆ. ಇದರಿಂದ ಪಾದಚಾರಿಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದು, ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಅಲ್ಲದೆ, ಮೈಸೂರಿಗೆ ಆಗಮಿಸುವ ಪ್ರವಾಸಿಗರಿಗೂ ಇದು ಕಿರಿಕಿರಿಯಾಗಿದೆ ಎಂದು ಹೇಳಲಾಗಿದೆ.
ಕೆಲ ಬೇನಾಮಿ ವ್ಯಕ್ತಿಗಳು ಫುಟ್ಪಾತ್ ವ್ಯಾಪಾರಿಗಳಿಂದ ಹಣ ವಸೂಲಿ ಮಾಡುತ್ತಿರುವುದಲ್ಲದೆ, ಕೆಲವು ಕಡೆಗಳಲ್ಲಿ ಪೊಲೀಸ್ ಸಿಬ್ಬಂದಿಯವರೇ ವಾರದ ಹಣ (ಹಫ್ತಾ) ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಆದರೂ ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮೈಸೂರು ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ಕೂಡಲೇ ಫುಟ್ಪಾತ್ ಒತ್ತುವರಿ ತೆರವುಗೊಳಿಸಿ, ಪಾದಚಾರಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕು ಎಂದು ವಕೀಲ ಗೋಕುಲ್ ಗೋವರ್ಧನ್ ಹಾಗೂ ಬಿಜೆಪಿ ಮುಖಂಡ ಮೋಹನ್ ಅವರು ಪ್ರತಿನಿಧಿ ನ್ಯೂಸ್ಗೆ ನೀಡಿದ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.
