ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ ಮಾಹಿತಿ
ಮಡಿಕೇರಿ: ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 25 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಕೇವಲ 10 ತಿಂಗಳುಗಳಲ್ಲಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದ್ದು, ಸುಮಾರು 140 ಕೋಟಿ ರೂ.ಗಳನ್ನು ವಿನಿಯೋಗಿಸಿದ್ದಾರೆ ಎಂದು ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಹಂಸ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅಹವಾಲು ಸ್ವೀಕರಿಸುವ ಮೂಲಕ ಶಾಸಕ ಡಾ.ಮಂತರ್ ಗೌಡ ಅವರು ಜನಸ್ನೇಹಿಯಾಗಿ ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುತ್ತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜನಪರ ಆಡಳಿತದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚು ಮತ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಶಾಸಕರು ಗ್ಯಾರಂಟಿ ಯೋಜನೆಗಳಿಂದ ಅನುದಾನ ಕೊರತೆಯಾಗಿದೆ, ಅಭಿವೃದ್ಧಿ ಕಾರ್ಯಗಳು ಕುಂಟಿತಗೊಂಡಿದೆ ಎಂದು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಆದರೆ ಅಭಿವೃದ್ಧಿ ಕಾರ್ಯಗಳಿಗೆ ಗ್ಯಾರಂಟಿ ಯೋಜನೆಗಳು ಅಡ್ಡಿಯಾಗಿಲ್ಲ, ಈ ಕುರಿತು ಚರ್ಚೆಗೆ ನಾವು ಸಿದ್ದರಿದ್ದೇವೆ ಎಂದು ಸವಾಲು ಹಾಕಿದರು.
ಕಳೆದ 25 ವರ್ಷಗಳಿಂದ ಅಭಿವೃದ್ಧಿ ಕಾಣದ ರಸ್ತೆಗಳಿಗೆ ಈಗ ಅಭಿವೃದ್ಧಿ ಭಾಗ್ಯ ದೊರೆತಿದ್ದು, ಕಾಮಗಾರಿಗಳು ಪ್ರಗತಿಯಲ್ಲಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಅನುದಾನ ದೊರೆಯಲಿದ್ದು, ಮಡಿಕೇರಿ ಹೆಚ್ಚು ಅಭಿವೃದ್ಧಿ ಹೊಂದಿದ ಕ್ಷೇತ್ರವಾಗಲಿದೆ. ಮಡಿಕೇರಿ ಬ್ಲಾಕ್ನಲ್ಲಿ ಕೆ.ನಿಡುಗಣೆ, ಗಾಳಿಬೀಡು, ಮಕ್ಕಂದೂರು, ಕಡಗದಾಳು, ಮರಗೋಡು, ಹೊಸ್ಕೇರಿ, ಮೂರ್ನಾಡು, ಹೊದವಾಡ ಮತ್ತು ಮಡಿಕೇರಿ ನಗರಸಭೆಗೆ ಒಳಪಟ್ಟ ರಸ್ತೆ ಸೇರಿದಂತೆ ಇತರ ಅಭಿವೃದ್ಧಿ ಕಾಮಗಾರಿಗೆ ಒಟ್ಟು 1,40 ಕೋಟಿ ರೂ. ಅನುದಾನ ಬಿಡುಗಡೆಗೊಂಡು ಶಂಕುಸ್ಥಾಪನೆಯಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಡಿಸಿಸಿ ಸದಸ್ಯ ಜಾನ್ಸನ್ ಪಿಂಟೋ, ಡಿಸಿಸಿ ಸದಸ್ಯ ಪುಷ್ಪ ಪೂಣಚ್ಚ, ಜಿಲ್ಲಾ ಗ್ಯಾರಂಟಿ ಸಮಿತಿ ಸದಸ್ಯ ಹರಿಪ್ರಸಾದ್ ಕೋಚನ ಹಾಗೂ ಬ್ಲಾಕ್ ಉಪಾಧ್ಯಕ್ಷ ವಿ.ಜಿ.ಮೋಹನ್ ಉಪಸ್ಥಿತರಿದ್ದರು. ಫೋಟೋ :: ಕಾಂಗ್ರೆಸ್