ಮೈಸೂರು, ಡಿಸೆಂಬರ್ 24, 2025 : ವಿಧಾನ ಪರಿಷತ್ತಿನ ಮಾಜಿ ಸದಸ್ಯ ಸಿದ್ದರಾಜು ಅವರಿಗೆ ಸೇರಿದ ಕೋಟ್ಯಾಂತರ ರೂಪಾಯಿ ಮೌಲ್ಯದ ನಿವೇಶನಗಳನ್ನು ನಕಲಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಸಿಕೊಳ್ಳಲು ಯತ್ನಿಸಿದ ಆಘಾತಕಾರಿ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೇರ್ಗಳ್ಳಿ ಗ್ರಾಮದ ವಿವಿಧ ಸರ್ವೇ ನಂಬರ್ಗಳಲ್ಲಿ (189, 203, 204/1 ಸೇರಿದಂತೆ ಹಲವು) ಸಿದ್ದರಾಜು ಅವರು ‘ಚಾಮುಂಡಿ ಸೂರು ನಗರ’ ಎಂಬ ಬಡಾವಣೆಯನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಬಡಾವಣೆಯಲ್ಲಿರುವ ಅವರಿಗೆ ಸೇರಿದ ಬೆಲೆಬಾಳುವ ನಿವೇಶನಗಳ ಮೇಲೆ ವಂಚಕರ ಕಣ್ಣು ಬಿದ್ದಿದೆ.
ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ನಡೆದಿದ್ದೇನು?
ಡಿಸೆಂಬರ್ 23 ರಂದು ಮೈಸೂರು ಪಶ್ಚಿಮ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ಈ ಹೈಡ್ರಾಮಾ ನಡೆದಿದೆ. ಸಿದ್ದರಾಜು ಅವರ ಹೆಸರಿನಲ್ಲಿದ್ದ ನಿವೇಶನಗಳನ್ನು ತಮ್ಮ ಹೆಸರಿಗೆ ಮಾಡಿಕೊಳ್ಳಲು ವಂಚಕರು ನಕಲಿ ದಾಖಲೆಗಳೊಂದಿಗೆ ಕಚೇರಿಗೆ ಬಂದಿದ್ದರು. ದಾಖಲೆಗಳನ್ನು ಪರಿಶೀಲಿಸುವಾಗ ಬಂದ ವ್ಯಕ್ತಿ ಸಿದ್ದರಾಜು ಅವರಲ್ಲ ಎಂಬುದು ಸಿಬ್ಬಂದಿಗೆ ಖಚಿತವಾಗಿದೆ. ಅಧಿಕಾರಿಗಳು ಪ್ರಶ್ನಿಸುತ್ತಿದ್ದಂತೆ ಆತಂಕಗೊಂಡ ವಂಚಕರು ಸ್ಥಳದಿಂದ ಪರಾರಿಯಾಗಿದ್ದಾರೆ.
ಸಿದ್ದರಾಜು ಅವರ ಪ್ರತಿಕ್ರಿಯೆ:

ವಿಷಯ ತಿಳಿಯುತ್ತಿದ್ದಂತೆಯೇ ಇಂದು ಉಪನೋಂದಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಿದ ಸಿದ್ದರಾಜು ಅವರು ಲಿಖಿತ ದೂರು ಸಲ್ಲಿಸಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ನನಗೆ ಸೇರಿದ ಅಂದಾಜು 20 ಕೋಟಿ ರೂಪಾಯಿಗಳಿಗೂ ಅಧಿಕ ಮೌಲ್ಯದ ನಿವೇಶನಗಳನ್ನು ನಕಲಿ ದಾಖಲೆಗಳ ಮೂಲಕ ಲಪಟಾಯಿಸಲು ಪ್ರಯತ್ನಿಸಲಾಗಿದೆ. ಈ ಬಗ್ಗೆ ಸಬ್ ರಿಜಿಸ್ಟ್ರಾರ್ ಅವರಿಗೆ ದೂರು ನೀಡಿದ್ದು, ಶೀಘ್ರವೇ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸುತ್ತೇನೆ,” ಎಂದು ತಿಳಿಸಿದರು.
