ಟಿ. ನರಸೀಪುರ, ಫೆಬ್ರವರಿ 18, 2026 : ಮೈಸೂರು ಜಿಲ್ಲೆಯಲ್ಲಿ ವನ್ಯಜೀವಿ ಹಾಗೂ ಮಾನವ ಸಂಘರ್ಷಕ್ಕೆ ಮತ್ತೊಂದು ಜೀವ ಬಲಿಯಾಗಿದ್ದು, ಟಿ. ನರಸೀಪುರ ತಾಲ್ಲೂಕಿನ ಪರಿಣಾಮಿಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ರೈತರೊಬ್ಬರು ಮೃತಪಟ್ಟಿದ್ದಾರೆ.
ಗ್ರಾಮದ ನಿವಾಸಿ ಗುರುಮಲ್ಲಪ್ಪ ಆನೆ ದಾಳಿಗೆ ಬಲಿಯಾದ ದುರ್ದೈವಿ.ಗುರುಮಲ್ಲಪ್ಪ ಅವರು ಎಂದಿನಂತೆ ತಮ್ಮ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಆನೆಯ ಅನಿರೀಕ್ಷಿತ ದಾಳಿಯಿಂದ ತಪ್ಪಿಸಿಕೊಳ್ಳಲಾಗದೆ ಅವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಟಿ. ನರಸೀಪುರ ವಲಯ ಅರಣ್ಯಾಧಿಕಾರಿ ಉಮೇಶ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಾಡಾನೆಗಳ ಹಾವಳಿಯಿಂದ ಆತಂಕಗೊಂಡಿರುವ ಗ್ರಾಮಸ್ಥರು, ಮೃತ ರೈತನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಕಾಡಾನೆಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಈ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ.
