ಮೈಸೂರು, ಡಿಸೆಂಬರ್ 16, 2025 : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ಅಭಿಮಾನಿಗಳಿಗೆ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್ಸಿಎ) ನೂತನ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಸಿಹಿಸುದ್ದಿಯೊಂದನ್ನು ನೀಡಿದ್ದಾರೆ. ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಉದ್ಘಾಟನಾ ಪಂದ್ಯವನ್ನು ಬೆಂಗಳೂರಿನಲ್ಲಿಯೇ ಆಯೋಜಿಸುವ ನಿಟ್ಟಿನಲ್ಲಿ ಬಿಸಿಸಿಐ ಜೊತೆ ಗಂಭೀರ ಮಾತುಕತೆ ನಡೆಸುತ್ತಿರುವುದಾಗಿ ಅವರು ತಿಳಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ವೆಂಕಟೇಶ್ ಪ್ರಸಾದ್, ಸಾಮಾನ್ಯವಾಗಿ ಹಿಂದಿನ ಆವೃತ್ತಿಯಲ್ಲಿ ಟ್ರೋಫಿ ಗೆದ್ದ ತಂಡದ ತವರು ಮೈದಾನದಲ್ಲಿಯೇ ಮುಂದಿನ ಆವೃತ್ತಿಯ ಉದ್ಘಾಟನಾ ಪಂದ್ಯ ನಡೆಯುವುದು ಐಪಿಎಲ್ ಸಂಪ್ರದಾಯವಾಗಿದೆ. ಆದರೆ, ಕಳೆದ ಬಾರಿ ಆರ್ಸಿಬಿ ಸಂಭ್ರಮಾಚರಣೆಯ ವೇಳೆ ನಡೆದ ಘಟನೆಯಿಂದ ಕೆಲವೊಂದು ಗೊಂದಲಗಳು ಉಂಟಾಗಿದ್ದವು. ಹೀಗಾಗಿ ಕೆಎಸ್ಸಿಎ ಚುನಾವಣೆ ಗೆದ್ದ ಬಳಿಕ ತಮ್ಮ ತಂಡ ರಾಜ್ಯ ಸರ್ಕಾರದ ಜೊತೆ ಮಾತುಕತೆ ನಡೆಸಿದೆ. ಪಂದ್ಯಾವಳಿ ನಡೆಸಲು ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ಈಗಾಗಲೇ ‘ಗ್ರೀನ್ ಸಿಗ್ನಲ್’ ನೀಡಿದ್ದು, ಗೃಹ ಸಚಿವರೊಂದಿಗೂ ದೂರವಾಣಿ ಮೂಲಕ ಚರ್ಚಿಸಿರುವುದಾಗಿ ಅವರು ಸ್ಪಷ್ಟಪಡಿಸಿದರು. ಶೀಘ್ರದಲ್ಲೇ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯದ ದಿನಾಂಕ ನಿಗದಿಯಾಗಲಿದ್ದು, ಬೆಂಗಳೂರಿನಲ್ಲಿ ಐಪಿಎಲ್ ಹಾಗೂ ಅಂತರಾಷ್ಟ್ರೀಯ ಪಂದ್ಯಗಳು ಸೇರಿದಂತೆ ಎಲ್ಲಾ ಮಾದರಿಯ ಪಂದ್ಯಗಳು ನಡೆಯಲಿವೆ ಎಂಬ ಭರವಸೆ ನೀಡಿದರು.
ಇದೇ ವೇಳೆ ಕ್ರಿಕೆಟ್ ಪ್ರೇಮಿಗಳಿಗೆ ಮತ್ತೊಂದು ಮಾಹಿತಿಯನ್ನು ಹಂಚಿಕೊಂಡ ಅವರು, ಮುಂಬರುವ ವಿಜಯ್ ಹಜಾರೆ ಟ್ರೋಫಿ ಪಂದ್ಯವನ್ನಾಡಲು ಟೀಂ ಇಂಡಿಯಾ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಎಂದರು. ಈ ಬಾರಿ ದೆಹಲಿ ತಂಡದ ಪರವಾಗಿ ವಿರಾಟ್ ಕೊಹ್ಲಿ ಕಣಕ್ಕಿಳಿಯಲಿದ್ದಾರೆ. ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸೇರಿದಂತೆ ಒಟ್ಟು ಮೂರು ಕ್ರೀಡಾಂಗಣಗಳಿದ್ದು, ಕೊಹ್ಲಿ ಆಡುವ ಪಂದ್ಯ ಎಲ್ಲಿ ನಡೆಯಲಿದೆ ಎಂಬುದು ಇನ್ನೂ ಅಂತಿಮವಾಗಿಲ್ಲ ಎಂದು ತಿಳಿಸಿದರು.
ಜೊತೆಗೆ ಮೈಸೂರು ಭಾಗದ ಕ್ರಿಕೆಟ್ ಬೆಳವಣಿಗೆಯ ಕುರಿತು ಮಾತನಾಡಿದ ಅವರು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಂತರಾಷ್ಟ್ರೀಯ ಮಟ್ಟದ ಕ್ರೀಡಾಂಗಣ ನಿರ್ಮಾಣದ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದರು. ಕಳೆದ ಮೂರು ವರ್ಷಗಳಿಂದ ಕ್ಲಬ್ನಲ್ಲಿ ಸಾಕಷ್ಟು ಗೊಂದಲಗಳಿದ್ದವು, ಆದರೆ ತಮ್ಮ ನೇತೃತ್ವದ ಹೊಸ ತಂಡ ಆ ಎಲ್ಲಾ ಗೊಂದಲಗಳನ್ನು ಬಗೆಹರಿಸಿ ಉತ್ತಮ ಕ್ರಿಕೆಟ್ಗೆ ಮೊದಲ ಆದ್ಯತೆ ನೀಡಲಿದೆ ಎಂದು ವೆಂಕಟೇಶ್ ಪ್ರಸಾದ್ ಹೇಳಿದರು.
