ಮೈಸೂರು, ಫೆಬ್ರವರಿ 7, 2026 : ರಾಜ್ಯ ರಾಜಕಾರಣದಲ್ಲಿ ಸದ್ದು ಮಾಡುತ್ತಿರುವ ಮುಖ್ಯಮಂತ್ರಿ ಬದಲಾವಣೆ ಹಾಗೂ ಅಧಿಕಾರ ಹಂಚಿಕೆಯ ಕುರಿತಾದ ಚರ್ಚೆಗಳಿಗೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮೈಸೂರಿನಲ್ಲಿ ಇಂದು ತೆರೆ ಎಳೆಯುವ ಪ್ರಯತ್ನ ನಡೆಸಿದರು. ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನದ ಹಂಚಿಕೆಯ ಬಗ್ಗೆ ಯಾವುದೇ ಪ್ರಸ್ತಾಪವೇ ನಡೆದಿಲ್ಲ ಮತ್ತು ಹೈಕಮಾಂಡ್ ಸಿದ್ದರಾಮಯ್ಯ ಅವರನ್ನೇ ಮುಖ್ಯಮಂತ್ರಿಯನ್ನಾಗಿ ಘೋಷಿಸಿದೆ. ಹೈಕಮಾಂಡ್ ಇದುವರೆಗೆ ಸಿದ್ದರಾಮಯ್ಯ ಅವರನ್ನು ಬದಲಿಸುವ ಬಗ್ಗೆ ಯಾವುದೇ ಸೂಚನೆ ನೀಡಿಲ್ಲದಿರುವುದು ಅವರು ಮುಂದುವರಿಯುತ್ತಾರೆ ಎನ್ನುವುದಕ್ಕೆ ಸ್ಪಷ್ಟ ಸಂಕೇತವಾಗಿದೆ ಎಂದು ತಿಳಿಸಿದರು.
ಡಾ. ಯತೀಂದ್ರ ಅವರ ‘ಸಿದ್ದರಾಮಯ್ಯ ಅವರೇ ಐದು ವರ್ಷ ಸಿಎಂ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ಅದು ಅವರ ವೈಯಕ್ತಿಕ ಅಭಿಪ್ರಾಯವಾಗಿರಬಹುದು ಅಥವಾ ಅವರಿಗೆ ಸಿಕ್ಕಿರುವ ಮಾಹಿತಿಯ ಆಧಾರದ ಮೇಲೆ ಹೇಳಿರಬಹುದು ಎಂದರು. ಪಕ್ಷದ ಶಾಸಕರಲ್ಲಿ ಯಾವುದೇ ಗೊಂದಲಗಳಿಲ್ಲ, ಒಂದು ವೇಳೆ ಗೊಂದಲವಿದ್ದಿದ್ದರೆ ಸಿಎಲ್ಪಿ ಸಭೆಯಲ್ಲಿ ಶಾಸಕರು ಪ್ರಶ್ನಿಸುತ್ತಿದ್ದರು. ಸದ್ಯಕ್ಕೆ ಮುಖ್ಯಮಂತ್ರಿಗಳು ಬಜೆಟ್ ಮಂಡನೆಗೆ ಸಿದ್ಧತೆ ನಡೆಸುತ್ತಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು. ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿದ್ದು, ಅವರು ಹೇಳುವವರೆಗೂ ಸಿದ್ದರಾಮಯ್ಯ ಅವರೇ ಅಧಿಕಾರದಲ್ಲಿ ಇರುತ್ತಾರೆ ಎಂದು ಪುನರುಚ್ಚರಿಸಿದರು. ಇನ್ನು ತಾವೇ ಯಾವಾಗ ಸಿಎಂ ಆಗುತ್ತೀರಿ ಎಂಬ ಮಾಧ್ಯಮಗಳ ಪ್ರಶ್ನೆಗೆ “ಆಮೇಲೆ ಹೇಳ್ತೀನಿ ನಡೀರಿ” ಎಂದು ನಗುತ್ತಾ ಉತ್ತರಿಸಿದರು.
ಸಾಲ ಮನ್ನಾ ಮತ್ತು ಡ್ರಗ್ಸ್ ಹಾವಳಿ ವಿರುದ್ಧ ಕಠಿಣ ಕ್ರಮ ಅಲ್ಪಸಂಖ್ಯಾತರ ಸಾಲ ಮನ್ನಾ ಕುರಿತಾದ ಟೀಕೆಗಳಿಗೆ ಉತ್ತರಿಸಿದ ಪರಮೇಶ್ವರ್, ಸರ್ಕಾರ ಈ ಹಿಂದೆಯೂ ರೈತರ ಸೇರಿದಂತೆ ವಿವಿಧ ಸಮುದಾಯಗಳ ಸಾಲ ಮನ್ನಾ ಮಾಡಿದೆ, ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಸಮರ್ಥಿಸಿಕೊಂಡರು. ಮೈಸೂರಿನಲ್ಲಿ ಡ್ರಗ್ಸ್ ಹಾವಳಿ ಬಗ್ಗೆ ಮಾತನಾಡಿದ ಅವರು, ರಾಜ್ಯದ ಎಲ್ಲಾ ಕೆಮಿಕಲ್ ಫ್ಯಾಕ್ಟರಿಗಳನ್ನು ತಪಾಸಣೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು. ಇತ್ತೀಚಿನ ಎನ್ಸಿಬಿ ದಾಳಿಯ ವರದಿಗಳ ಕುರಿತು ಅನುಮಾನ ವ್ಯಕ್ತಪಡಿಸಿದ ಸಚಿವರು, ಸ್ಥಳೀಯ ಪೊಲೀಸರಿಗೆ ಲಭ್ಯವಾದ ಮಾಹಿತಿಗೂ ಎನ್ಸಿಬಿ ಪತ್ರಿಕಾ ಹೇಳಿಕೆಗೂ ವ್ಯತ್ಯಾಸವಿದ್ದು, ಕೋರ್ಟ್ನಲ್ಲಿ ದಾಖಲಾದ ಮಾಹಿತಿಯಲ್ಲಿ ಡ್ರಗ್ಸ್ ಪತ್ತೆಯಾದ ಬಗ್ಗೆ ಉಲ್ಲೇಖವಿಲ್ಲ ಎಂದು ಪ್ರಶ್ನಿಸಿದರು.
