ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿಶ್ವಾಸ । ಪಾಂಡವಪುರದಲ್ಲಿ ಸಮನ್ವಯ ಸಭೆ
ಪಾಂಡವಪುರ : ಮಂಡ್ಯ ಕ್ಷೇತ್ರದಿಂದ ಎನ್ ಡಿಎ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸುವ ಮೂಲಕ ಕಾವೇರಿ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ ಸಿಗಲಿದೆ ಎಂದು ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ವಿಶ್ವಾಸ ವ್ಯಕ್ತಪಡಿಸಿದರು.
ಪಟ್ಟಣದ ಟಿಎಪಿಸಿಎಂಎಸ್ ಕಲ್ಯಾಣ ಮಂಟಪದಲ್ಲಿ ಮಂಡ್ಯ ಲೋಕಸಭೆ ಚುನಾವಣೆ ಸಂಬಂಧ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಹಾಗೂ ಮುಖಂಡರ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.
ಎಚ್.ಡಿ.ಕುಮಾರಸ್ವಾಮಿ ಮಂಡ್ಯ ಕ್ಷೇತ್ರದಿಂದ ಗೆದ್ದು, ಪ್ರಧಾನಿ ಮೋದಿ ಸರ್ಕಾರದಲ್ಲಿ ಕೇಂದ್ರ ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಕ್ಷಣದಿಂದಲೇ ಕಾವೇರಿ ಜಲ ವಿವಾದ ಸಮಸ್ಯೆ ಕುರಿತು ಗಮನಹರಿಸಿ, ಕಾವೇರಿ ವಿವಾದ ಇತ್ಯರ್ಥ ಮಾಡಲಿದ್ದಾರೆ.
ಸಂಸದೆ ಸುಮಲತಾ ಅವರ ಬಗ್ಗೆ ಮಳವಳ್ಳಿ ಶಾಸಕ ನರೇಂದ್ರಸ್ವಾಮಿ ಅವಾಜ್ ಗೆ ಸುಮಲತಾ ಅಕ್ಕ ಹೆದರುವುದಿಲ್ಲ, ಸುಮಲತಾ ಪರವಾಗಿ ನಾವಿದ್ದೇವೆ.
ಪ್ರಧಾನಿಯಾಗಿದ್ದ ಎಚ್.ಡಿ.ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಪಕ್ಷದ ಕುತಂತ್ರದಿಂದ ಅಧಿಕಾರ ಕಳೆದುಕೊಳ್ಳಬೇಕಾಯಿತು. ನಿಖಿಲ್ ಕುಮಾರಸ್ವಾಮಿಗೂ ಮೈತ್ರಿ ಹೆಸರಿನಲ್ಲಿ ಕಾಂಗ್ರೆಸ್ ಮುಖಂಡರು ಬೆನ್ನಿಗೆ ಚೂರಿ ಹಾಕುವಂತ ಕೆಲಸ ಮಾಡಿಬಿಟ್ಟರು.
ಆದರೆ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಲೋಕಸಭೆ ಚುನಾವಣೆಯಲ್ಲಿ 28 ಕ್ಷೇತ್ರವನ್ನೂ ಗೆಲ್ಲುತ್ತೇವೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ನಡುಕ ಉಂಟಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಒಗ್ಗಟ್ಟಿನಿಂದ ಚುನಾವಣೆ ನಡೆಸೋಣ. ಎಲ್ಲರೂ ಸೌಜನ್ಯದಿಂದ ವರ್ತಿಸಿ, ಕುಮಾರಸ್ವಾಮಿ ಗೆಲುವಿಗೆ ಶ್ರಮಿಸೋಣ. ಬಿಜೆಪಿ ಕಾರ್ಯಕರ್ತರ ಸಮಸ್ಯೆಗೆ ನಾನು ಸ್ಪಂದಿಸುತ್ತೇನೆ ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಸಚಿವ ಚಲುವರಾಯಸ್ವಾಮಿ ಹಾಗೂ ಶಾಸಕ ರಮೇಶ್ ಬಾಬು ಬಂಡಿಸಿದ್ದೇಗೌಡ ಅವರು ಮಾತಿನ ಮೇಲೆ ಹಿಡಿತ ಇರಬೇಕು. ನಿಮ್ಮ ದುರಹಂಕಾರದ ಹೇಳಿಕೆಗೆ ಈ ಚುನಾವಣೆ ಫಲಿತಾಂಶದಲ್ಲಿ ಉತ್ತರ ಸಿಗುತ್ತದೆ. ಕುಮಾರಸ್ವಾಮಿ ಗೆದ್ದು ಕೇಂದ್ರದಲ್ಲಿ ಮಂತ್ರಿ ಆಗೋದು ಖಚಿತವಾಗಿದೆ.
ಕಾಂಗ್ರೆಸ್, ಜೆಡಿಎಸ್ ಮೈತ್ರಿಯಿಂದ ಕಳೆದ ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯಾಗಿದ್ದ ನಿಖಿಲ್ ಕುಮಾರಸ್ವಾಮಿ ಅವರನ್ನು ಸ್ಪರ್ಧಿಸಿ, ಕೊನೆಗೆ ಕಾಂಗ್ರೆಸ್ ಪಕ್ಷದ ನಾಯಕರು ನಿಖಿಲ್ ಬೆನ್ನಿಗೆ ಚೂರಿ ಹಾಕಿದಂತೆ ಮೋಸ ಮಾಡಿ, ಸೋಲಿಸಿದರು.
ಆದರೆ ಬಿಜೆಪಿ ಪಕ್ಷದವರು ಪ್ರಾಮಾಣಿಕರು. ನಿಖಿಲ್ ಸೋಲಿನ ಸೇಡನ್ನು ಕುಮಾರಸ್ವಾಮಿ ಅವರನ್ನು ಎರಡು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲಿಸಿ, ಕಾಂಗ್ರೆಸ್ ಪಕ್ಷಕ್ಕೆ ತೋರಿಸುತ್ತೇವೆ.
ಭಾರತ ದೇಶದ ಪ್ರಧಾನಿಯಾಗಿ ಮೋದಿ ಅವರು ಮೂರನೇ ಬಾರಿ ಅಧಿಕಾರ ಚುಕ್ಕಾಣಿ ಹಿಡಿಯಲಿದ್ದಾರೆ. ಕಾಂಗ್ರೆಸ್ ಪಕ್ಷ ಧೂಳೀಪಟ ಆಗೋದು ಗ್ಯಾರಂಟಿ ಎಂದರು.
ಮಂಡ್ಯ ಲೋಕಸಭೆ ಕ್ಷೇತ್ರದಿಂದ ಸಿ.ಎಸ್.ಪುಟ್ಟರಾಜು ಮೈತ್ರಿ ಅಭ್ಯರ್ಥಿ ಆಗಿ, ಗೆದ್ದು ಸಂಸದರಾಗಿ ದೆಹಲಿಗೆ ಹೋಗಿದ್ದರೆ, ಮೇಲುಕೋಟೆ ವಿಧಾನಸಭೆ ಕ್ಷೇತ್ರದಿಂದ ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ನಾನು ರಾಜಕೀಯ ಭವಿಷ್ಯ ರೂಪಿಸಿಕೊಳ್ಳಬಹುದಿತ್ತು. ಆದರೆ ಪುಟ್ಟರಾಜುಗೆ ಅಭ್ಯರ್ಥಿ ಆಗುತ್ತಾರೆ ಎಂಬ ಆಸೆ ಇಟ್ಟುಕೊಂಡಿದ್ದೆ. ಆದರೆ ಪುಟ್ಟರಾಜು ಆಗಲಿಲ್ಲ. ಮುಂದಿನ ರಾಜಕೀಯ ಸಮಯ ಬಂದಾಗ ನೋಡೋಣ ಎಂದು ಹೇಳಿದರು.
ಎಂಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್ ಮಾತನಾಡಿ, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನದ ಚುನಾವಣೆಯ ಮೂರು ವರ್ಷದ ಹಿಂದೆಯೇ, ಪುಟ್ಟರಾಜು ನೇತೃತ್ವದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ಆಗಿತ್ತು. ಪುಟ್ಟರಾಜು ಶಕ್ತಿ ನಮಗೆ ಚೆನ್ನಾಗಿ ಗೊತ್ತಿದೆ. ಏನೋ ವಿಧಾನಸಭೆ ಚುನಾವಣೆಯಲ್ಲಿ ಆಕಸ್ಮಿಕವಾಗಿ ಪರಾಭವಗೊಂಡಿರಬಹುದು. ಕುಮಾರಸ್ವಾಮಿ ಗೆಲುವಿನ ಮೂಲಕ ಇನ್ಮುಂದೆ ಪುಟ್ಟರಾಜು ರಾಜಕಾರಣ ಶುರು ಆಗುತ್ತದೆ ಎಂದರು.
ಸಮನ್ವಯ ಸಭೆಯಲ್ಲಿ ಮಾಜಿ ಸಚಿವರಾದ ಸಿ.ಎಸ್.ಪುಟ್ಟರಾಜು, ಕೆ.ಸಿ.ನಾರಾಯಣಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್, ಜೆಡಿಎಸ್ ಜಿಲ್ಲಾಧ್ಯಕ್ಷ ಡಿ.ರಮೇಶ್, ಬಿಜೆಪಿ ಮಾಜಿ ಎಂಎಲ್ ಸಿ ಹಾಗೂ ಬಿಜೆಪಿ ಉಸ್ತುವಾರಿ ಸುನಿಲ್ ಸುಬ್ರಮಣ್ಯ, ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಸಿ.ಪಿ.ಉಮೇಶ್, ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳ ನವೀನ್ ಕುಮಾರ್, ಜೆಡಿಎಸ್ ಪಾಂಡವಪುರ ತಾಲೂಕು ಅಧ್ಯಕ್ಷ ಬೆಳ್ಳಾಳೆ ಎಸ್.ಎ.ಮಲ್ಲೇಶ್, ಬಿಜೆಪಿ ಅಧ್ಯಕ್ಷ ನೀಲನಹಳ್ಳಿ ಧನಂಜಯ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕೆ.ಎಲ್.ಆನಂದ್ ಸೇರಿದಂತೆ ಅನೇಕ ಮುಖಂಡರಿದ್ದರು.