ಮಂಡ್ಯ, ಜನವರಿ 30: ಕೆರಗೋಡು ಗ್ರಾಮದಲ್ಲಿನ ಹನುಮ ಧ್ವಜವನ್ನು ತೆರವುಗೊಳಿಸಿದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಜಿಲ್ಲಾಡಳಿತದ ವಿರುದ್ಧ ನಿನ್ನೆ ಪ್ರತಿಭಟನೆ ನಡೆಸಿದ್ದರು. ಇದೀಗ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಮತ್ತೆ ಎರಡು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಅಲ್ಲದೇ ಸೋಮವಾರ ಕೆರಗೋಡು ಗ್ರಾಮದಿಂದ ಮಂಡ್ಯ ನಗರದಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿವರೆಗು ನಡೆದ ಬಿಜೆಪಿ ಮತ್ತು ಜೆಡಿಎಸ್ ಪ್ರತಿಭಟನೆ ಮೆರವಣಿಗೆಯಲ್ಲಿ ಭಾಗಿಯಾಗಿದ್ದವರ ವಿರುದ್ಧವೂ ಮೊಕದ್ದಮೆ ಹೂಡಲಾಗಿದೆ. ಡಿವೈಎಸ್ಪಿ ಶಿವಮೂರ್ತಿ ಅವರು ನೀಡಿದ ದೂರಿನ ಮೇರೆಗೆ ದೂರು ದಾಖಲಾಗಿದೆ.
ಮೆರವಣೆಗೆ ವೇಳೆ ಪಾದಯಾತ್ರೆ ವೇಳೆ ಮಂಡ್ಯದ ಮಹವೀರ ಸರ್ಕಲ್ ನಲ್ಲಿ ಬ್ಯಾನರ್ ಹಾಗೂ ಸಾರ್ವಜನಿಕರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಕ್ರಮವಾಗಿ ಗುಂಪು ಕಟ್ಟಿಕೊಂಡು ಪೊಲೀಸರ ಕೆಲಸಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಪ್ರಕಾಶ್, ಆರಾಧ್ಯ, ಬಸವರಾಜು, ಕಾಂತ, ಅವಿನಾಶ್, ಅಭಿ ಪಾಟೀಲ್, ಶಿವಕುಮಾರ್, ಸೋಮಶೇಖರ್ ಸೇರಿದಂತೆ ಇತರೆ 42-50 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 147, 148, 504, 353, 149ರ ಅಡಿ ಎಫ್ಐಆರ್ ದಾಖಲಾಗಿದೆ.
ಮತ್ತೊಂದು ಪ್ರಕರಣದಲ್ಲಿ, ಪಾದಯಾತ್ರೆ ವೇಳೆ ಕುರುಬರ ಸಂಘದ ಆವರಣದಲ್ಲಿರುವ ವಿದ್ಯಾರ್ಥಿ ನಿಲಯದ ಕಿಟಕಿ ಗಾಜುಗಳನ್ನ ಕಲ್ಲು, ದೊಣ್ಣೆಗಳಿಂದ ಹೊಡೆದು ಹಾಕಿದ್ದಾರೆ. ಅಕ್ರಮವಾಗಿ ಸಂಘದ ಆವರಣಕ್ಕೆ ನುಗ್ಗಿ ದಾಂದಲೆ ನಡೆಸಿದ್ದಾರೆಂದು ಜಿಲ್ಲಾ ಕುರುಬರ ಸಂಘದ ಕಾರ್ಯದರ್ಶಿ ಶಶಿಧರ್ ಎಂಬುವರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ.