ಮಡಿಕೇರಿ: ಪರಿಶಿಷ್ಟರ ಅಭಿವೃದ್ಧಿಗಾಗಿ ಮೀಸಲಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಅನ್ಯಾಯ ಮಾಡುತ್ತಿದೆ ಎಂದು ಕೊಡಗು ಜಿಲ್ಲಾ ಬಿಜೆಪಿಯ ಎಸ್ಟಿ ಮೋರ್ಚಾ ಆರೋಪಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್ಟಿ ಮೋರ್ಚಾದ ಜಿಲ್ಲಾಧ್ಯಕ್ಷ ಎಂ.ಎಂ.ಪರಮೇಶ್ವರ, ಈ ರೀತಿ ಅನುದಾನವನ್ನು ನಿಯಮಬಾಹಿರವಾಗಿ ಬಳಕೆ ಮಾಡುವ ಮೂಲಕ ಪರಿಶಿಷ್ಟರಿಗೆ ಸರಕಾರ ವಂಚನೆ ಮಾಡುತ್ತಿದೆ. ದುರ್ಬಲ ವರ್ಗವನ್ನು ಹಸಿವಿನಲ್ಲಿಟ್ಟು ಇತರರ ಹೊಟ್ಟೆ ತುಂಬಿಸುವ ಕಾರ್ಯ ಯಾಕೆ ಮಾಡಬೇಕು, ಪರಿಶಿಷ್ಟರ ಅನುದಾನವನ್ನು ಬಳಸಿಕೊಂಡಂತೆ ಅಲ್ಪಸಂಖ್ಯಾತರ ಅನುದಾನವನ್ನು ಯಾಕೆ ಬಳಸಿಕೊಳ್ಳುತ್ತಿಲ್ಲವೆಂದು ಪ್ರಶ್ನಿಸಿದರು.
ಕೇಂದ್ರ ಸರಕಾರದ ವಿರುದ್ಧ “ಚೊಂಬು” ಜಾಹೀರಾತು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅತ್ಯಂತ ಕೀಳು ಮಟ್ಟದ ರಾಜಕಾರಣ ಪ್ರದರ್ಶಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಕನ್ನಡಿಗರಿಗೆ ನೀಡಿದ ಕೊಡುಗೆ ಏನು ಎನ್ನುವುದನ್ನು ಮೊದಲು ಸಾಬೀತುಪಡಿಸಲಿ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ನಂತರ ಸುರಕ್ಷತೆ ಇಲ್ಲದಾಗಿದೆ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ದೇಶದಲ್ಲೂ ಇದೇ ಪರಿಸ್ಥಿತಿ ಎದುರಾಗಬಹುದು ಎಂದು ಆತಂಕ ವ್ಯಕ್ತಪಡಿಸಿದ ಪರಮೇಶ್ವರ, ಈ ಬಗ್ಗೆ ಜನ ಎಚ್ಚೆತ್ತುಕೊಳ್ಳಬೇಕು ಮತ್ತು ಸಮರ್ಥ ನಾಯಕ ನರೇಂದ್ರಮೋದಿ ಅವರನ್ನು ಬೆಂಬಲಿಸಬೇಕೆಂದು ಮನವಿ ಮಾಡಿದರು.
ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಪಿ.ಎಂ.ರವಿ ಎಸ್ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಜಯಣ್ಣ ವಿ.ಕೆ ಹಾಗೂ ವಿರಾಜಪೇಟೆ ಅಧ್ಯಕ್ಷ ಪಿ.ಎ.ಮುತ್ತುರಾಜ್ ಮಾತನಾಡಿ ಬಲಿಷ್ಠ ರಾ ನಿರ್ಮಾಣಕ್ಕಾಗಿ ಎನ್ಡಿಎ ಮೈತ್ರಿ ಕೂಟ ಹಾಗೂ ಪ್ರಧಾನಿ ನರೇಂದ್ರಮೋದಿ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದರು.