ಮೈಸೂರು: ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಇಂದು ಮೈಸೂರಿಗೆ ಆಗಮಿಸಿದ ಸಂದರ್ಭದಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಅದ್ದೂರಿ ಸ್ವಾಗತ ಕೋರಿದರು. ನಗರದ ಟೋಲ್ಗೇಟ್ ಬಳಿ ಯತ್ನಾಳ್ ಅವರನ್ನು ಬರಮಾಡಿಕೊಳ್ಳಲಾಯಿತು.
ಮೈಸೂರಿನ ಟೋಲ್ಗೇಟ್ ಬಳಿ ಜಮಾಯಿಸಿದ್ದ ಅಭಿಮಾನಿಗಳು ಮತ್ತು ಕಾರ್ಯಕರ್ತರು, ಯತ್ನಾಳ್ ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು.ಜೆಸಿಬಿಗಳ ಮೂಲಕ ಯತ್ನಾಳ್ ಅವರ ಮೇಲೆ ಹೂಮಳೆ ಸುರಿಸಲಾಯಿತು. ಪಟಾಕಿ ಸಿಡಿಸಿ, ಬೃಹತ್ ಹೂವಿನ ಹಾರಗಳನ್ನು ಹಾಕಿ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕರ್ತರು “ಹಿಂದೂ ಹುಲಿ ಯತ್ನಾಳ್” ಎಂದು ಘೋಷಣೆ ಕೂಗಿ ಜೈಕಾರ ಹಾಕಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.ಯತ್ನಾಳ್ ಅವರು ಹಿಂದೂ ಜಾಗೃತ ವೇದಿಕೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದರು.
ಹಿಂದೂ ಜಾಗೃತಾ ಕಾರ್ಯಕ್ರಮ ಉದ್ಘಾಟನೆ
ನಂತರ, ಮೈಸೂರಿನ ಕಲಾಮಂದಿರದಲ್ಲಿ ಹಿಂದೂ ಜಾಗೃತಾ ವೇದಿಕೆ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮುಖ್ಯ ಅತಿಥಿಗಳಾಗಿ ಭಾಗಿಯಾದರು. ಯತ್ನಾಳ್ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಭಾಷ್ಯಂ ಸ್ವಾಮೀಜಿ, ಮುಖಂಡರಾದ ಹರೀಶ್ ಕುಮಾರ್ ಹೆಗ್ಡೆ, ಲಾ ಗೈಡ್ ವೆಂಕಟೇಶ್, ಮಲ್ಲೇಶ್, ಭಾಸ್ಕರ್ ನಾಯ್ಡು ಸೇರಿದಂತೆ ಅನೇಕ ಪ್ರಮುಖರು ಭಾಗವಹಿಸಿದ್ದರು.

