ಮಾದಿಗ ಮೀಸಲಾತಿ ಹೋರಾಟ ಸಮಿತಿ ಅಧ್ಯಕ್ಷ ಮಂದ ಕೃಷ್ಣ ಮಾದಿಗ
ಚಿಕ್ಕಬಳ್ಳಾಪುರ : ಕೇಂದ್ರ ಸರ್ಕಾರದ ಸಚಿವ ಸಂಪುಟದಲ್ಲಿ ಇತಿಹಾಸದಲ್ಲಿ ಎಂದಿಗೂ ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ವರ್ಗದ ಪ್ರಾತಿನಿಧ್ಯ ಶೇ.40 ದಾಟಿರಲಿಲ್ಲ. ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಈ ಪ್ರಾತಿನಿಧ್ಯ ಶೇ.50 ದಾಟಿ 60 ಆಗಿದೆ ಎಂದು ಮಾದಿಗ ಮೀಸಲಾತಿ ಹೋರಾಟ ಸಮಿತಿಯ ಸಂಸ್ಥಾಪಕ ಹಾಗೂ ಅಧ್ಯಕ್ಷ ಮಂದ ಕೃಷ್ಣ ಮಾದಿಗ ಹೇಳಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರವಾಗಿ ಅವರು ಚುನಾವಣಾ ಪ್ರಚಾರ ನಡೆಸಿದರು. ಈ ವೇಳೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ 77 ಸಚಿವರಲ್ಲಿ 27 ಒಬಿಸಿ, 12 ಪರಿಶಿಷ್ಟ ಜಾತಿ ಹಾಗೂ 8 ಪರಿಶಿಷ್ಟ ಪಂಗಡದವರಾಗಿದ್ದಾರೆ. 47 ಸಚಿವರು ಅಂದರೆ ಶೇ.61 ರಷ್ಟು ಸಚಿವರು ಪರಿಶಿಷ್ಟ ಹಾಗೂ ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಮೋದಿ ಅವರ ಕಾಲದಲ್ಲಿ ಹಿಂದುಳಿದವರಿಗೆ, ದಲಿತರಿಗೆ ಅಧಿಕಾರ ಸಿಕ್ಕಿದೆ ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ರಚಿತ ಸಂವಿಧಾನ 60 ವರ್ಷಗಳ ಕಾಲ ಜಮ್ಮು ಕಾಶ್ಮೀರದಲ್ಲಿ ಜಾರಿಯಾಗಿರಲಿಲ್ಲ. ಜಮ್ಮು ಕಾಶ್ಮೀರದಲ್ಲಿ ದಲಿತರಿಗೆ ಮೀಸಲಾತಿ ಸಿಕ್ಕಿರಲಿಲ್ಲ. ಪ್ರಧಾನಿ ಮೋದಿಯವರು 370 ರದ್ದು ಮಾಡಿದ ನಂತರವೇ ಅಲ್ಲಿ ದಲಿತರಿಗೆ ಮೀಸಲಾತಿ ಸಿಕ್ಕಿದೆ. ಜೊತೆಗೆ ಮೇಲ್ಜಾತಿಯ ಬಡವರಿಗೂ ಶೇ.10 ಮೀಸಲಾತಿ ದೊರೆತಿದೆ. ಮಹಿಳೆಯರಿಗೆ ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇ. 33 ಮೀಸಲಾತಿಯನ್ನು ಪ್ರಧಾನಿ ಮೋದಿ ನೀಡಿದ್ದಾರೆ. ತ್ರಿವಳಿ ತಲಾಖ್ ರದ್ದು ಮಾಡಿ ಬಡ ಮುಸ್ಲಿಂ ಮಹಿಳೆಯರಿಗೆ ನೆರವಾಗಿದ್ದಾರೆ ಎಂದರು.
ಮಾದಿಗರ ಕನಸು ನನಸಾಗಲು ಮೋದಿ ಬೇಕು :ಮಾದಿಗ ಮೀಸಲಾತಿ ಹೋರಾಟಕ್ಕೆ ಸದಾ ಬೆಂಬಲವಾಗಿ ನಿಂತಿರುವ ಸುಧಾಕರ್ ಅವರಿಗೆ ಕೃತಜ್ಞತೆ ಸಲ್ಲಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಮೋದಿ ಅವರು ಮತ್ತೆ ಪ್ರಧಾನಿ ಆಗುವಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಮೋದಿ ಅವರು ನಮ್ಮ ಕಣ್ಣೀರು ಒರೆಸುವ ಕೆಲಸ ಮಾಡಿದ್ದಾರೆ. ಮಾದಿಗರ ಮೂರು ದಶಕಗಳ ಹೋರಾಟ ಫಲಿಸಬೇಕಾದರೆ ಮೋದಿ ಮೂರನೇ ಬಾರಿಗೆ ಪ್ರಧಾನಿ ಆಗಬೇಕು ಎಂದರು.