ಮೈಸೂರು, ಜುಲೈ 8, 2026: ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ಸರಣಿ ದರೋಡೆ, ಮನೆಗಳ್ಳತನ ಹಾಗೂ ಬೈಕ್ ಕಳ್ಳತನ ಪ್ರಕರಣಗಳನ್ನು ಭೇದಿಸುವಲ್ಲಿ ಜಿಲ್ಲಾ ಪೊಲೀಸರು ಭರ್ಜರಿ ಯಶಸ್ಸು ಸಾಧಿಸಿದ್ದಾರೆ. ಒಟ್ಟು 30 ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಕಾರ್ಯಾಚರಣೆ ನಡೆಸಿರುವ ಪೊಲೀಸರು, 35 ಮಂದಿ ಆರೋಪಿಗಳನ್ನು ಕಡ್ಡಾಯವಾಗಿ ಬಂಧಿಸಿದ್ದಾರೆ.
ಬಂಧಿತರಿಂದ ಬರೋಬ್ಬರಿ 1 ಕೋಟಿ 55 ಲಕ್ಷದ 12 ಸಾವಿರದ 300 ರೂಪಾಯಿ ಮೌಲ್ಯದ ಚಿನ್ನಾಭರಣ, ನಗದು ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಯಶಸ್ವಿ ಕಾರ್ಯಾಚರಣೆ ನಡೆಸಿದ ಪೊಲೀಸ್ ತಂಡಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಹೈ-ಪ್ರೊಫೈಲ್ ದರೋಡೆ ಪ್ರಕರಣವೊಂದನ್ನು ಪೊಲೀಸರು ಚಾಣಾಕ್ಷತನದಿಂದ ಭೇದಿಸಿದ್ದಾರೆ ಎಂದು ತಿಳಿಸಿದರು. ಕೇರಳ ಮೂಲದ ಚಿನ್ನದ ವ್ಯಾಪಾರಿಗಳು ನಂಜನಗೂಡಿನಲ್ಲಿ ವ್ಯಾಪಾರ ಮುಗಿಸಿ ತಮ್ಮ ಊರಿಗೆ ಹಿಂದಿರುಗುತ್ತಿದ್ದಾಗ ಮಾರ್ಗಮಧ್ಯೆ ಅಡ್ಡಗಟ್ಟಿ, ಕಾರಿನಲ್ಲಿದ್ದ 85 ಲಕ್ಷ ರೂಪಾಯಿ ಹಣವನ್ನು ದರೋಡೆ ಮಾಡಲಾಗಿತ್ತು. ಪ್ರಕರಣದ ಗಾಂಭೀರ್ಯತೆಯನ್ನು ಅರಿತು ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಿ, ಹಲವು ಆಯಾಮಗಳಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಸದ್ಯ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಸ್ನೇಹಿತರ ಗುಂಪನ್ನು ಬಂಧಿಸಲಾಗಿದ್ದು, ಇವರು ಎರಡು ತಂಡಗಳಾಗಿ ಬಂದು ಈ ಕೃತ್ಯ ಎಸಗಿದ್ದಾರೆ ಎಂಬುದು ತಿಳಿದುಬಂದಿದೆ. ಬಂಧಿತರಿಂದ 11 ಲಕ್ಷ ರೂಪಾಯಿ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ 3 ವಾಹನಗಳನ್ನು ಸೀಜ್ ಮಾಡಲಾಗಿದ್ದು, ತಲೆಮರೆಸಿಕೊಂಡಿರುವ ಇನ್ನುಳಿದ ಮೂವರು ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಮತ್ತೊಂದೆಡೆ, ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು ಹಗಲು ದರೋಡೆ ಪ್ರಕರಣಗಳ ತನಿಖೆಯ ವೇಳೆ ಅಂತರ್ಜಿಲ್ಲಾ ಖತರ್ನಾಕ್ ಕಳ್ಳನೊಬ್ಬ ಸಿಕ್ಕಿಬಿದ್ದಿದ್ದಾನೆ. ಹೋಂಡಾ ಆಕ್ಟಿವಾ ಬೈಕ್ನಲ್ಲಿ ಬಂದು ಕಳ್ಳತನ ಮಾಡುತ್ತಿದ್ದ ಈತ, ಹಾಸನ ಹಾಗೂ ಚಿಕ್ಕಮಗಳೂರು ಸೇರಿದಂತೆ ಒಟ್ಟು 37 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಎನ್ನುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಈತ ಕಳ್ಳತನಕ್ಕಾಗಿ ಬಳಸುತ್ತಿದ್ದ ವಾಹನವು ಇಬ್ಬರು ಮೂವರ ಕೈ ಬದಲಾಗಿತ್ತು. ವಿಶೇಷವೆಂದರೆ, ಈ ಕಳ್ಳ ಎಲ್ಲೂ ಮನೆಯ ಬಾಗಿಲು ಅಥವಾ ಬೀಗವನ್ನು ಒಡೆಯುತ್ತಿರಲಿಲ್ಲ. ಬದಲಿಗೆ ಸಾರ್ವಜನಿಕರು ಮನೆಯ ಹೊರಗೆ, ಕಿಟಕಿ ಅಥವಾ ಕುಂಡಗಳ ಬಳಿ ಕೀ ಇಡುವುದನ್ನು ಹೊಂಚು ಹಾಕಿ ಗಮನಿಸಿ, ಅದೇ ಕೀ ಬಳಸಿ ನಿರಾಯಾಸವಾಗಿ ಕಳ್ಳತನ ಮಾಡುತ್ತಿದ್ದ. ಪ್ರಸ್ತುತ ಈತನ ಬಂಧನದಿಂದ 8 ಪ್ರಕರಣಗಳಿಗೆ ಸಂಬಂಧಿಸಿದ ಸುಮಾರು ಅರ್ಧ ಕೆಜಿಯಷ್ಟು ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇದೇ ವೇಳೆ ಕೆ.ಆರ್. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಕ್ರಿಯವಾಗಿದ್ದ ದ್ವಿಚಕ್ರ ವಾಹನಗಳ ಕಳ್ಳರ ಜಾಲವನ್ನು ಪತ್ತೆ ಮಾಡಲಾಗಿದ್ದು, ಕಾರ್ಯಾಚರಣೆಯ ವೇಳೆ ಕಳವು ಮಾಡಲಾಗಿದ್ದ 7 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಮತ್ತು ಅಪರಾಧ ಕೃತ್ಯಗಳಿಗೆ ಬ್ರೇಕ್ ಹಾಕುವಲ್ಲಿ ಮೈಸೂರು ಜಿಲ್ಲಾ ಪೊಲೀಸರು ತೋರಿದ ಈ ಕ್ಷಿಪ್ರ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.
