ಮೈಸೂರು, ಡಿಸೆಂಬರ್ 5, 2025 :ಶಾಲಾ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಕರೆದೊಯ್ದಿದ್ದ ಬಸ್ ಪಲ್ಟಿಯಾದ ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಲ್ಲಿ ತರಳಬಾಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ ಎಂದು ಪೋಷಕರು ಮತ್ತು ಸ್ಥಳೀಯ ಮುಖಂಡರು ಗಂಭೀರ ಆರೋಪ ಮಾಡಿದ್ದಾರೆ. ಮೈಸೂರಿನ ಟಿ.ಕೆ. ಬಡಾವಣೆಯಲ್ಲಿರುವ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಸ್ ಪಲ್ಟಿಯಾದ ಈ ದುರಂತದಲ್ಲಿ ಪವನ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದರು. ಗಾಯಾಳು ವಿದ್ಯಾರ್ಥಿಗಳ ಪೈಕಿ ಗೌತಮಿ ಖುಷಿ ಎಂಬ ವಿದ್ಯಾರ್ಥಿನಿಯ ಸ್ಥಿತಿ ಚಿಂತಾಜನಕವಾಗಿದ್ದು, ತಲೆಗೆ ತೀವ್ರ ಪೆಟ್ಟು ಬಿದ್ದ ಪರಿಣಾಮ ರಕ್ತ ಹೆಪ್ಪುಗಟ್ಟಿದೆ.
ಆದರೆ, ವಿದ್ಯಾರ್ಥಿನಿಯ ಗಂಭೀರ ಸ್ಥಿತಿಯ ಹೊರತಾಗಿಯೂ ಸೂಕ್ತ ಚಿಕಿತ್ಸೆ ಕೊಡಿಸಲು ಶಾಲೆಯ ಆಡಳಿತ ಮಂಡಳಿಯು ಅಗತ್ಯ ನೆರವು ನೀಡುತ್ತಿಲ್ಲ ಎಂದು ಪೋಷಕರು ದೂರಿದ್ದಾರೆ. “ಗಾಯಾಳು ಮಕ್ಕಳ ವಿಚಾರದಲ್ಲಿ ಶಾಲೆಯ ಆಡಳಿತ ಮಂಡಳಿ ಸಕಾರಾತ್ಮಕವಾಗಿ ಸ್ಪಂದಿಸುತ್ತಿಲ್ಲ,” ಎಂದು ಪೋಷಕರು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ಈ ಕುರಿತು ಮಹಾನಗರ ಪಾಲಿಕೆ ಮಾಜಿ ಸದಸ್ಯ ಗೋಪಿ, ಗಾಯಾಳು ವಿದ್ಯಾರ್ಥಿನಿ ಗೌತಮಿಖುಷಿಯ ದೊಡ್ಡಪ್ಪ ಗೋವಿಂದರಾಜು, ತಾಯಿ ಸುಧಾ ಸೇರಿದಂತೆ ಇತರರು ಮಾಧ್ಯಮದ ಜೊತೆ ಮಾತನಾಡಿ ತರಳಬಾಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.
“ಎಲ್ಲಾ ವೆಚ್ಚವನ್ನು ನಾವೇ ಭರಿಸುತ್ತೇವೆ” – ಪ್ರಾಂಶುಪಾಲರ ಸ್ಪಷ್ಟನೆ
ಪೋಷಕರು ಮತ್ತು ಸಾರ್ವಜನಿಕರ ಆಕ್ರೋಶದ ಹಿನ್ನೆಲೆಯಲ್ಲಿ, ತರಳಬಾಳು ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪರವಾಗಿ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ಅವರು ಮಾಧ್ಯಮದವರೊಂದಿಗೆ ಸ್ಪಷ್ಟನೆ ನೀಡಿದ್ದಾರೆ. ಪ್ರಾಂಶುಪಾಲ ಮಹದೇವಸ್ವಾಮಿ ಅವರು, “ಬಸ್ ಪಲ್ಟಿಯಾದ ದುರಂತದಲ್ಲಿ ಗಾಯಗೊಂಡಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ಕೊಡಿಸಲು ಶಾಲೆಯ ಆಡಳಿತ ಮಂಡಳಿ ಬದ್ಧವಾಗಿದೆ,” ಎಂದು ತಿಳಿಸಿದ್ದಾರೆ.
