ಬೆಂಗಳೂರು : ರಾಜ್ಯ ಬಜೆಟ್ನಲ್ಲಿ ಮೂಲಸೌಕರ್ಯ ಯೋಜನೆಗಳು ಮತ್ತು ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸಲು 8,050 ಕೋಟಿ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಮನವಿ ಮಾಡಿದೆ. ಬಿಬಿಎಂಪಿ ಅಧಿಕಾರಿಗಳ ಪ್ರಕಾರ, ಗುತ್ತಿಗೆದಾರರಿಗೆ ಬಾಕಿ ಬಿಲ್ ಪಾವತಿ ಮತ್ತು ನಡೆಯುತ್ತಿರುವ ಕಾಮಗಾರಿಗಳಿಗೆ ಸುಮಾರು 3,000 ಕೋಟಿ ರೂ. ಬೇಕಾಗಿದೆ. ಇನ್ನು ಗುತ್ತಿಗೆದಾರರಿಗೆ ಬಿಬಿಎಂಪಿ ನೀಡಬೇಕಿರುವ ಒಟ್ಟು ಬಾಕಿ ಮೊತ್ತ 2,700 ಕೋಟಿ ರೂಪಾಯಿ ಎಂದು ಪಾಲಿಕೆ ಮೂಲಗಳು ತಿಳಿಸಿವೆ. ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ 200 ಕೋಟಿ ರೂ., ಘನತ್ಯಾಜ್ಯ ನಿರ್ವಹಣೆಗೆ 600 ಕೋಟಿ ರೂ., ಮಳೆ ನೀರು ಚರಂಡಿಗಳ ಅಭಿವೃದ್ಧಿಗೆ 200 ಕೋಟಿ ರೂ. ಅಗತ್ಯವಿದೆ ಎಂದು ಬಿಬಿಎಂಪಿ ಸರ್ಕಾರಕ್ಕೆ ತಿಳಿಸಿದೆ.