ಮೈಸೂರು : ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸಿಎಂ ಸಿದ್ದರಾಮಯ್ಯ ತವರು ಕ್ಷೇತ್ರವಾದ ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವುದು ಕಾಂಗ್ರೆಸ್ ಗೆ ಬಹು ದೊಡ್ಡ ಸವಾಲಾಗಿ ಪರಿಣಮಿಸಿದೆ. ಮೈಸೂರು- ಕೊಡಗು, ಚಾಮರಾಜನಗರ ಕ್ಷೇತ್ರಕ್ಕೆ ಸರಿಯಾದ ಅಭ್ಯರ್ಥಿ ಸಿಗದ ಕಾರಣ ಕಾಂಗ್ರೆಸ್ ಗೆ ಅಭ್ಯರ್ಥಿ ಗಳ ಆಯ್ಕೆಯೇ ದೊಡ್ಡ ತಲೆನೋವಾಗಿದೆ. ಮೈಸೂರಿನಲ್ಲಿ ಸತತ ಎರಡು ಬಾರಿ ಜಯಗಳಿಸಿರುವ ಬಿಜೆಪಿಯ ಸಂಸದ ಪ್ರತಾಪ್ ಸಿಂಹ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಮತ್ತೊಂದು ಕಡೆ ಚಾಮರಾಜನಗರ ಕ್ಷೇತ್ರದಲ್ಲಿ ಹಿರಿಯ ಸಂಸದ ವಿ.ಶ್ರೀನಿವಾಸ ಪ್ರಸಾದ್ ಬೇರೂರಿದ್ದಾರೆ. ಹೀಗಾಗಿ ಬಿಜೆಪಿಗೆ ಟಕ್ಕರ್ ಕೊಡಲು ಕಾರ್ಯತಂತ್ರ ರೂಪಿಸುತ್ತಿರುವ ಕಾಂಗ್ರೆಸ್ ಗೆ ಸಮರ್ಥ ಅಭ್ಯರ್ಥಿಗಳು ಸಿಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಎರಡು ಕ್ಷೇತ್ರವು ಪ್ರತಿಷ್ಠೆಯಾಗಿರುವ ಕಾರಣ ಒಂದು ಕಡೆ ಮೈಸೂರಿನಿಂದ ಸಚಿವ ಕೆ.ವೆಂಕಟೇಶ್ ಸ್ಪರ್ಧಿಸುವಂತೆ ಒತ್ತಡ ಹಾಕುತ್ತಿದ್ರೆ, ಮತ್ತೊಂದು ಕಡೆ ಚಾಮರಾಜನಗರ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಎಂದು ಡಾ.ಎಚ್.ಸಿ.ಮಹದೇವಪ್ಪ ಹೇಳುತ್ತಿದ್ದಾರೆ. ಇದರ ಪರಿಣಾಮ ಶಾಸಕ ಪುಟ್ಟರಂಗಶೆಟ್ಟಿ ಮೇಲೆ ಒತ್ತಡ ಹಾಕಲಾಗಿದೆ. ಒಂದೆಡೆ ಸಿದ್ದರಾಮಯ್ಯ ಪುತ್ರ ಯತೀಂದ್ರ ಕೂಡ ಸ್ಪರ್ಧೆಯಿಂದ ಹಿಂದೆ ಸರಿದಿರುವುದರಿಂದ ಲೋಕಸಭಾ ವ್ಯಾಪ್ತಿಯ ಅಭ್ಯರ್ಥಿ ಹುಡುಕಾಟವೇ ಕಾಂಗ್ರೆಸ್ ಗೆ ಸವಾಲಾಗಿದೆ.