ಮಂಗಳೂರು : ಕರಾವಳಿ ಬಿಜೆಪಿಯ ಭದ್ರಕೋಟೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಹಿಡಿತದಿಂದ ತಪ್ಪಿ ಹಲವು ವರ್ಷಗಳೇ ಕಳೆದಿವೆ. ಸದ್ಯ, ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ನಳಿನ್ ಕುಮಾರ್ ಕಟೀಲ್ ಸಂಸದರಾಗಿರುವ ದಕ್ಷಿಣ ಕನ್ನಡದಲ್ಲಿ ಹೊಸ ಮುಖವನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ. ಈ ನಿಟ್ಟಿನಲ್ಲಿ ನೋಡುವುದಾದರೆ, ಕ್ಯಾಪ್ಟನ್ ಬ್ರಿಜೇಶ್ ಚೌಟಾ ಅವರು ಬಿಜೆಪಿ ಟಿಕೆಟ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ನಳಿನ್ ಕುಮಾರ್ ಕಟೀಲ್ ಅವರು ಹ್ಯಾಟ್ರಿಕ್ ಗೆಲುವು ದಾಖಲಿಸಿದ್ದಾರೆ. ಆದರೆ ಈ ಬಾರಿ ಅವರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯೆತೆ ಇದೆ ಎನ್ನಲಾಗುತ್ತಿದೆ. ಕರಾವಳಿ ಬಿಜೆಪಿ ಕಾರ್ಯಕರ್ತರು ಹಾಗೂ ಸಂಘಟನೆ ಕಾರ್ಯಕರ್ತರು ಕಟೀಲ್ ಮೇಲೆ ಒಲವು ಹೊಂದಿಲ್ಲ. ಕಾರ್ಯಕರ್ತರ ಅಭಿಪ್ರಾಯವನ್ನು ಕಡೆಗಣಿಸಿ ಕಟೀಲ್ಗೆ ಟಿಕೆಟ್ ನೀಡಿದರೆ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ಕ್ಷೇತ್ರದಲ್ಲಾದ ಬಂಡಾಯದ ಬಿಸಿ ಲೋಕಸಭಾ ಚುನಾವಣೆಯಲ್ಲಿ ಮರುಕಳಿಸುವ ಸಾಧ್ಯತೆ ಇದೆ.