ಬೆಂಗಳೂರು : ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಹುದೊಡ್ಡ ತಲೆನೋವಾಗಿ ಪರಿಣಮಿಸಿದೆ. ಹಲವು ಸುತ್ತುಗಳ ಸಮಾಲೋಚನೆ, ಸಭೆಗಳ ಬಳಿಕವೂ ಪಟ್ಟಿ ಅಂತಿಮಗೊಳಿಸಲು ಸಾಧ್ಯವಾಗುತ್ತಿಲ್ಲ. ಇದೀಗ ನಿಗಮ ಮಂಡಳಿ ನೇಮಕ ವಿಚಾರ ರಾಜ್ಯ ಕಾಂಗ್ರೆಸ್ ನಾಯಕರು ಮತ್ತು ಹೈಕಮಾಂಡ್ ನಡುವಣ ಸಂಘರ್ಷವಾಗಿ ಮಾರ್ಪಟ್ಟಿದೆ. ಹೈಕಮಾಂಡ್ ಕಳುಹಿಸಿರುವ ಪಟ್ಟಿಯಲ್ಲಿ ಕೆಲವು ಅಚ್ಚರಿಯ ಹೆಸರುಗಳು ಕಾಣಿಸಿವೆ ಎನ್ನಲಾಗಿದ್ದು, ಇದನ್ನು ಅಂತಿಮಗೊಳಿಸಲು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮತಿಸುತ್ತಿಲ್ಲ. ಈ ವಿಚಾರವಾಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಈಗಾಗಲೇ ಮಾತುಕತೆಯನ್ನೂ ನಡೆಸಿದ್ದಾರೆ. ನಿಗಮ ಮಂಡಳಿ ಹಂಚಿಕೆ ವಿಚಾರ ಇದೀಗ ಮತ್ತೆ ಕಾಂಗ್ರೆಸ್ ಹೈಕಮಾಂಡ್ ಅಂಗಳ ತಲುಪಿದೆ. ಹೈಕಮಾಂಡ್ ಪಟ್ಟಿಗೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇನ್ನೂ ಗ್ರೀನ್ ಸಿಗ್ನಲ್ ನೀಡಿಲ್ಲ. ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ ನಡೆಗೆ ಸಿಎಂ ಹಾಗೂ ಡಿಸಿಎಂ ಬೇಸರ ವ್ಯಕ್ತಪಡಿಸಿದ್ದಾರೆ. ಹೀಗಾಗಿ ಸುರ್ಜೇವಾಲ ಬೆಂಗಳೂರಿಗೆ ಮತ್ತೆ ಆಗಮಿಸುತ್ತಿದ್ದಾರೆ.