ಬೆಂಗಳೂರು, ನವೆಂಬರ್ 10, 2025 : ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ನಮಾಜ್ ಮಾಡಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೀಗ ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಲ್ಲಿಂದು ಮಾತಾನಾಡಿದ ಅವರು, ಏರ್ಪೋರ್ಟ್ಗಳಲ್ಲಿ ಪ್ರಾರ್ಥನೆಗೆ ಪ್ರತ್ಯೇಕ ಕೊಠಡಿಗಳು ಇರುತ್ತವೆ. ಆದರೆ, ಇಲ್ಲಿ ಸಾರ್ವಜನಿಕವಾಗಿ ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬುದು ತಮ್ಮ ಸರ್ಕಾರದ ನಿಲುವು. ಬೆಂಗಳೂರಿನಲ್ಲಿ ಪ್ರತಿಭಟನೆಗಳಿಗೆ ಫ್ರೀಡಂ ಪಾರ್ಕ್ ಅನ್ನು ನಿಗದಿಪಡಿಸಿದಂತೆ ಇಡೀ ರಾಜ್ಯಕ್ಕೆ ಈ ನಿಯಮವನ್ನು ವಿಸ್ತರಿಸಿದಾಗ ಬಿಜೆಪಿ ತನ್ನ ಅಂಗ ಸಂಸ್ಥೆಗಳ ಮೂಲಕ ಧಾರವಾಡದಲ್ಲಿ ಮಧ್ಯಂತರ ತಡೆ ತಂದಿದ್ದೇಕೆ ಎಂದು ಪ್ರಶ್ನಿಸಿದ್ದಾರೆ.
RSS ಅಥವಾ ನಮಾಜ್ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಖಂಡಿತವಾಗಿಯೂ ಅಗತ್ಯ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಿದ್ದರೆ,ಸಾರ್ವಜನಿಕರಿಗೆ ಕಷ್ಟವಾಗದಿದ್ದರೆ ಅನುಮತಿ ನೀಡಲಾಗುವುದು. ಈ ಬಗ್ಗೆ ಕಾನೂನನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾದಾಗ ಬಿಜೆಪಿಯೇ ಅಲ್ಲವೇ ತಡೆ ತಂದಿದ್ದು ಎಂದು ಖರ್ಗೆ ಪ್ರಶ್ನಿಸಿದ್ದಾರೆ. ಅಲ್ಲದೆ ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಕಲೆಹಾಕಿ ಪ್ರತಿಕ್ರಿಯೆ ನೀಡೋದಾಗಿ ಹೇಳಿದ್ದಾರೆ.
ಸದ್ಯ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2 ರಲ್ಲಿ ನಮಾಜ್ ಮಾಡಲು ಅವಕಾಶ ನೀಡಿದ್ದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಉನ್ನತ ಭದ್ರತಾ ವಲಯದಲ್ಲಿ ಧಾರ್ಮಿಕ ಆಚರಣೆಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಪ್ರಶ್ನೆ ಮಾಡಿದೆ. ಪೊಲೀಸರು ಅಥವಾ ಬೇರೆ ಯಾರೂ ನಮಾಜ್ ತಡೆಯಲು ಪ್ರಯತ್ನಿಸಲಿಲ್ಲ. ಇದು ಕಾಂಗ್ರೆಸ್ ಸರ್ಕಾರದ ದ್ವಂದ್ವ ನೀತಿಯನ್ನು ತೋರಿಸುತ್ತದೆ. ಮತ್ತು ಇದು ಒಂದು ಸಮುದಾಯಕ್ಕೆ ಸ್ಪಷ್ಟವಾಗಿ ಓಲೈಕೆ ಮಾಡುವುದಾಗಿದೆ ಎಂದು ಬಿಜೆಪಿ ಪ್ರಿಯಾoಕ್ ಖರ್ಗೆಗೆ ಕೌಂಟರ್ ಕೊಟ್ಟಿದೆ.
