ಬೆಂಗಳೂರು: ಹಳೇ ಮೈಸೂರು ಗೆಲ್ಲುವುದಕ್ಕೆ ಕಾಂಗ್ರೆಸ್ ಈಗಾಗಲೇ ಒಂದು ಕಾರ್ಡ್ ಪ್ಲೇ ಮಾಡಿದೆ. ಅದು ಒಕ್ಕಲಿಗ ಜಾತಿ ಕಾರ್ಡ್. ಇದೇ ಒಕ್ಕಲಿಗ ಅಸ್ತ್ರವನ್ನ ಮತ್ತಷ್ಟು ಜೀವಂತವಾಗಿಡಲು ಕಾಂಗ್ರೆಸ್ ಮತ್ತೊಂದು ಪ್ಲ್ಯಾನ್ ಮಾಡಿಕೊಂಡಿದೆ. ಮೋದಿ ಆಗಮನಕ್ಕೂ ಕೌಂಟರ್ ಕೊಡಲು ಏಪ್ರಿಲ್ 17 ರಾಹುಲ್ ಗಾಂಧಿಯವರನ್ನ ಅಖಾಡಕ್ಕೆ ಇಳಿಸುತ್ತಿದ್ದಾರೆ. ಮಧ್ಯಾಹ್ನ 1.20ಕ್ಕೆ ರಾಹುಲ್ ಗಾಂಧಿ ಕೇರಳದಿಂದ ಬೆಂಗಳೂರಿನ ಹೆಚ್ಎಎಲ್ಗೆ ಆಗಮಿಸಲಿದ್ದಾರೆ. ಅಲ್ಲಿಂದ ಮಂಡ್ಯಕ್ಕೆ ತೆರಳಲಿದ್ದು, ಸಾರ್ವಜನಿಕ ಸಭೆಯಲ್ಲಿ ಭಾಗಿ ಆಗಲಿದ್ದಾರೆ. ತಮ್ಮ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ. ನಂತರ ಅಲ್ಲಿಂದ ಮಧ್ಯಾಹ್ನ 3.30ಕ್ಕೆ ಹೆಲಿಕಾಪ್ಟರ್ ಮೂಲಕ ಕೋಲಾರಕ್ಕೆ ತೆರಳಲಿದ್ದಾರೆ. ಅಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿ ಮತಬೇಟೆಯಾಡಲಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕು ಚೊಕ್ಕಂಡಹಳ್ಳಿ ಗ್ರಾಮದ ಬಳಿ ಸುಮಾರು 50 ಎಕರೆ ಪ್ರದೇಶದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದೆ. ಮಾಲೂರು ಶಾಸಕ ಕೆ.ವೈ.ನಂಜೇಗೌಡ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ, ಸುರ್ಜೇವಾಲ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಸುಮಾರು 50 ಸಾವಿರಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ.
