ಪ್ರತಿನಿಧಿ ವರದಿ ಚಾಮರಾಜನಗರ
ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರವ್ಯಾಪ್ತಿಯ 221-ಹನೂರು ವಿಧಾನಸಭಾ ಕ್ಷೇತ್ರದ ಇಂಡಿಗನತ್ತ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 146ರಲ್ಲಿ ಏಪ್ರಿಲ್ 29ರಂದು ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೆ ಮರು ಮತದಾನ ನಡೆಯಲಿದ್ದು, ಮತದಾನ ಕೇಂದ್ರದಲ್ಲಿ ಕಾನೂನು ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಏ28ರ ಮಧ್ಯರಾತ್ರಿ 12 ಗಂಟೆಯಿಂದ ಏ.29ರ ಮಧ್ಯರಾತ್ರಿ 12 ಗಂಟೆಯವರೆಗೆ ಭಾರತ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 144 ರನ್ವಯ ಮತಗಟ್ಟೆಯ ಸುತ್ತಲು 100 ಮೀ. ಅಂತರದೊಳಗೆ ಕೆಲ ಷರತ್ತುಗಳನ್ನು ವಿಧಿಸಿ ನಿಷೇಧಾಜ್ಞೆಯನ್ನು ಜಾರಿ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ.
ಮೆರವಣಿಗೆ ಅಥವಾ 5 ಜನರಿಗಿಂತ ಹೆಚ್ಚು ಜನ ಸೇರುವುದನ್ನು ನಿಷೇಧಿಸಿದೆ. ಯಾವುದೇ ರೀತಿಯ ಮಾರಕಾಸ್ತ್ರ, ಶಸ್ತ್ರಾಸ್ತ್ರ, ಸ್ಪೋಟಕ ವಸ್ತುಗಳನ್ನು ಒಯ್ಯವಂತಿಲ್ಲ. ಪ್ರತಿಕೃತಿ ಪ್ರದರ್ಶನ, ದಹನ ಮಾಡುವುದು ಮತ್ತು ಬಹಿರಂಗ ಘೋಷಣೆ ಇತ್ಯಾದಿಗಳನ್ನು ನಿರ್ಬಂಧಿಸಿದೆ. ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಡುವುದು, ವ್ಯಕ್ತಿಗಳ ತೇಜೋವಧೆ ಮಾಡುವಂತಹ ಚಿತ್ರಗಳು, ಚಿಹ್ನೆಗಳು, ಪ್ರತಿಕೃತಿ ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ, ಸಾರ್ವಜನಿಕರ ಗಾಂಭೀರ್ಯ, ನೈತಿಕತೆಗೆ ಭಂಗ ತರುವಂತಹ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ.
ಈ ಆದೇಶವು ಚುನಾವಣಾ ಕರ್ತವ್ಯ ನಿರತ ಮತಗಟ್ಟೆ ಅಧಿಕಾರಿ, ಸಿಬ್ಬಂದಿ, ಪೊಲೀಸ್ ಅಧಿಕಾರಿ, ನೇಮಕಗೊಂಡಿರುವ ಚುನಾವಣಾ ಏಜೆಂಟರು ಮತ್ತು ಒಬ್ಬೊಬ್ಬರಾಗಿ ಮತಗಟ್ಟೆಗೆ ತೆರಳಿ ಮತದಾನ ಮಾಡುವ ಮತದಾರರಿಗೆ ಅನ್ವಯಿಸುವುದಿಲ್ಲ. ಅಂತ್ಯಕ್ರಿಯೆ ಮೆರವಣಿಗೆ ಹಾಗೂ ಇನ್ನಿತರ ಪ್ರಾಧಿಕಾರದಿಂದ ಅನುಮತಿ ಪಡೆದ ಪ್ರಕರಣಗಳಿಗೆ ಆದೇಶವು ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಶಿಲ್ಪಾನಾಗ್ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
