ಮೈಸೂರು, ಏಪ್ರಿಲ್ 3, 2026 : ರಾಜ್ಯದ ರೈತರು ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ ಕಂಗಾಲಾಗಿದ್ದಾರೆ ಎಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಸಚಿವ ಸಾ.ರಾ. ಮಹೇಶ್ ಕಳವಳ ವ್ಯಕ್ತಪಡಿಸಿದ್ದಾರೆ.
ಭತ್ತ, ರಾಗಿ ಮತ್ತು ತಂಬಾಕು ಸೇರಿದಂತೆ ವಿವಿಧ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಯೋಗ್ಯ ಬೆಲೆ ಸಿಗುತ್ತಿಲ್ಲ. ಸರ್ಕಾರವು ಕೆ.ಆರ್. ನಗರ, ಚುಂಚನಕಟ್ಟೆ ಮತ್ತು ಸಾಲಿಗ್ರಾಮದಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ತೆರೆದಿದ್ದರೂ, ಅಲ್ಲಿ ರೈತರನ್ನು ದೋಚಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಖರೀದಿ ಕೇಂದ್ರಗಳಲ್ಲಿ ರಾಗಿ ಮಾರಾಟ ಮಾಡುವಾಗ ಪ್ರತಿ ಕ್ವಿಂಟಾಲ್ಗೆ 4 ಕೆ.ಜಿ ರಾಗಿಯನ್ನು ಹೆಚ್ಚುವರಿಯಾಗಿ ಪಡೆಯಲಾಗುತ್ತಿದೆ. ಇದರಿಂದಾಗಿ ಪ್ರತಿ ರೈತನಿಗೂ ಕ್ವಿಂಟಾಲ್ಗೆ 200 ರಿಂದ 250 ರೂಪಾಯಿ ನಷ್ಟವಾಗುತ್ತಿದೆ. ಸಾಗಣೆ ವೆಚ್ಚ ಮತ್ತು ಕೂಲಿ ಕಾರ್ಮಿಕರ ವೆಚ್ಚದ ಹೆಸರಿನಲ್ಲಿ ರೈತರಿಗೆ ಅನ್ಯಾಯವಾಗುತ್ತಿದ್ದು, ಈ ಅಕ್ರಮದ ಹಣ ಎಲ್ಲಿಗೆ ಹೋಗುತ್ತಿದೆ ಎಂದು ಅವರು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳು ಹಲವು ಬಾರಿ ಮೈಸೂರಿಗೆ ಭೇಟಿ ನೀಡಿದರೂ, ರೈತರ ಹಗಲು ದರೋಡೆ ಕಣ್ಣಿಗೆ ಕಾಣುತ್ತಿಲ್ಲವೇ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದ ನಂತರ ಅವರು ಭರವಸೆ ನೀಡಿದ್ದರೂ, ಇದುವರೆಗೆ ಆಗಿರುವ ನಷ್ಟಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿರುವ ಸಾ.ರಾ. ಮಹೇಶ್, ಆಹಾರ ಇಲಾಖೆಯ ಅಧಿಕಾರಿಗಳು ಕಣ್ಮುಚ್ಚಿ ಕುಳಿತಿದ್ದಾರೆ ಎಂದು ದೂರಿದ್ದಾರೆ. ಟ್ರಾನ್ಸ್ಪೋರ್ಟ್ ಲಾಬಿಯ ಅಕ್ರಮಕ್ಕೆ ಕಡಿವಾಣ ಹಾಕದಿದ್ದರೆ, ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳು ಮೈಸೂರಿಗೆ ಬಂದಾಗ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.
ಇದೇ ಸಂದರ್ಭದಲ್ಲಿ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮೈಸೂರು ಜಿಲ್ಲಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ ಬಟ್ಟೆ ಬ್ಯಾಗ್ ಖರೀದಿ ಅವ್ಯವಹಾರದ ಕುರಿತು ಹೈಕೋರ್ಟ್ ಕಠಿಣ ತನಿಖೆಗೆ ಆದೇಶಿಸಿರುವುದನ್ನು ಅವರು ಸ್ವಾಗತಿಸಿದ್ದಾರೆ. ಈ ಬೆಳವಣಿಗೆಯನ್ನು ‘ಸತ್ಯಮೇವ ಜಯತೇ’ ಎಂದು ಬಣ್ಣಿಸಿರುವ ಅವರು, ನ್ಯಾಯಾಲಯದ ಆದೇಶದಿಂದ ಜನಸಾಮಾನ್ಯರಿಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ವಿಶ್ವಾಸ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ರಾಜಕಾರಣಿಗಳು ಮತ್ತು ಅಧಿಕಾರಿಗಳಲ್ಲಿ ಒಳ್ಳೆಯವರು ಹಾಗೂ ಕೆಟ್ಟವರು ಇರುತ್ತಾರೆ, ಆದರೆ ಇಂತಹ ತನಿಖೆಗಳಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಬೀಳಬೇಕು ಎಂದು ಅವರು ತಿಳಿಸಿದ್ದಾರೆ.
