ಮೈಸೂರು, ಫೆಬ್ರವರಿ 6, 2026 : ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಅವರು ಇಂದು ಮೈಸೂರಿನಲ್ಲಿ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ನಮ್ಮ ತಂದೆಯವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ, ಇದು ಈಗ ಈಗಾಗಲೇ ಇತ್ಯರ್ಥವಾಗಿರುವ (Settled) ವಿಚಾರ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನಾಯಕತ್ವಕ್ಕೆ ಹೈಕಮಾಂಡ್ ಸಂಪೂರ್ಣ ಬೆಂಬಲ ನೀಡಿದ್ದು, ಪೂರ್ಣಾವಧಿಗೆ ಅವರೇ ಸಿಎಂ ಆಗಿರಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿಸಿದರು. ಈ ಹಿಂದೆ ಕೆಲವರು ನಾಯಕತ್ವ ಬದಲಾವಣೆಗೆ ಪ್ರಯತ್ನ ನಡೆಸಿದ್ದರೂ, ಹೈಕಮಾಂಡ್ ಅದಕ್ಕೆ ಕಿಂಚಿತ್ತೂ ಮನ್ನಣೆ ನೀಡಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಅಧಿಕಾರ ನಡೆಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದೊಳಗೆ ಈಗ ನಾಯಕತ್ವ ಬದಲಾವಣೆಯ ಬಗ್ಗೆ ಯಾವುದೇ ಚರ್ಚೆಗಳು ನಡೆಯುತ್ತಿಲ್ಲ. ಇಂತಹ ಚರ್ಚೆಗಳು ಕೇವಲ ಮಾಧ್ಯಮಗಳಲ್ಲಿ ಮಾತ್ರ ಸದ್ದಾಗುತ್ತಿವೆಯೇ ಹೊರತು, ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ ಎಂದು ಹೇಳುವ ಮೂಲಕ ಯತೀಂದ್ರ ಅವರು ನಾಯಕತ್ವ ಬದಲಾವಣೆಯ ವದಂತಿಗಳಿಗೆ ಪೂರ್ಣವಿರಾಮ ಹಾಕಿದ್ದಾರೆ.
ಸಚಿವ ಜಾರ್ಜ್ ರಾಜೀನಾಮೆ ವದಂತಿ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ
ಇದೇ ವೇಳೆ ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆ ವಿಚಾರದ ಬಗ್ಗೆಯೂ ಮಾತನಾಡಿದ ಅವರು, ಈ ಬಗ್ಗೆ ಸ್ವತಃ ಜಾರ್ಜ್ ಅವರೇ ಈಗಾಗಲೇ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿಸಿದರು. ಈ ವಿವಾದದಲ್ಲಿ ತಮ್ಮ ಹೆಸರನ್ನು ಅನಗತ್ಯವಾಗಿ ಎಳೆದು ತರುತ್ತಿರುವ ಬಿಜೆಪಿಯ ನಿಲುವನ್ನು ಅವರು ತೀವ್ರವಾಗಿ ಖಂಡಿಸಿದರು. “ನಾನು ಯಾವತ್ತೂ ಜಾರ್ಜ್ ಅವರ ಇಲಾಖೆಯ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡಿಲ್ಲ ಅಥವಾ ಆ ಬಗ್ಗೆ ಚರ್ಚೆಯನ್ನೂ ನಡೆಸಿಲ್ಲ. ಬಿಜೆಪಿಯವರಿಗೆ ನನ್ನ ತಂದೆಯವರನ್ನು (ಸಿಎಂ ಸಿದ್ದರಾಮಯ್ಯ) ನೇರವಾಗಿ ಟಾರ್ಗೆಟ್ ಮಾಡಲು ಸಾಧ್ಯವಾಗುತ್ತಿಲ್ಲ, ಆ ಕಾರಣಕ್ಕಾಗಿ ಪ್ರತಿಯೊಂದು ವಿಚಾರದಲ್ಲೂ ನನ್ನನ್ನು ಗುರಿಯಾಗಿಸುತ್ತಿದ್ದಾರೆ” ಎಂದು ಡಾ. ಯತೀಂದ್ರ ಆಕ್ರೋಶ ವ್ಯಕ್ತಪಡಿಸಿದರು. ಜಾರ್ಜ್ ಅವರ ವಿಚಾರದಲ್ಲೂ ಬಿಜೆಪಿ ರಾಜಕೀಯ ಪಿತೂರಿ ನಡೆಸುತ್ತಿದೆ ಎಂದು ಅವರು ಮೈಸೂರಿನಲ್ಲಿ ಸ್ಪಷ್ಟಪಡಿಸಿದರು.
ಇವಿಎಂ ರದ್ದತಿಗೆ ಆಗ್ರಹ ಮತ್ತು ಬ್ಯಾಲೆಟ್ ಪೇಪರ್ ಪರ ಬ್ಯಾಟಿಂಗ್
ದೇಶದ ಚುನಾವಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಇವಿಎಂ ಮತಯಂತ್ರಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಮತ್ತು ಮೊದಲಿನಂತೆ ಬ್ಯಾಲೆಟ್ ಪೇಪರ್ ಬಳಕೆಯನ್ನು ಜಾರಿಗೆ ತರಬೇಕು ಎಂದು ಡಾ. ಯತೀಂದ್ರ ಒತ್ತಾಯಿಸಿದ್ದಾರೆ. ಇವಿಎಂ ಮತಯಂತ್ರಗಳಲ್ಲಿ ಸಾಕಷ್ಟು ತಾಂತ್ರಿಕ ದೋಷಗಳಿದ್ದು, ಇವುಗಳನ್ನು ಹ್ಯಾಕ್ ಮಾಡುವ ಸಾಧ್ಯತೆಗಳಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ರಾಜ್ಯದ ಗ್ರಾಮ ಪಂಚಾಯತಿ ಚುನಾವಣೆಗಳಲ್ಲಿ ಈಗಾಗಲೇ ಬ್ಯಾಲೆಟ್ ಪೇಪರ್ ಬಳಸಲು ನಿರ್ಧರಿಸಲಾಗಿದ್ದು, ಇದೇ ಮಾದರಿಯನ್ನು ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ವಿಸ್ತರಿಸಬೇಕು ಎಂಬುದು ಅವರ ವಾದವಾಗಿದೆ. “ಹಿಂದಿನ ಕಾಲದಂತೆ ಈಗ ಬ್ಯಾಲೆಟ್ ಬಾಕ್ಸ್ ಕಳ್ಳತನ ಮಾಡಲು ಸಾಧ್ಯವಿಲ್ಲ, ನಮ್ಮ ಭದ್ರತಾ ವ್ಯವಸ್ಥೆ ಅಷ್ಟು ಬಿಗಿಯಾಗಿದೆ. ಆದರೆ ಇವಿಎಂ ಮೂಲಕ ತಾಂತ್ರಿಕವಾಗಿ ಕಳ್ಳತನ ಮಾಡುವ ಅಪಾಯವಿದೆ, ಹಾಗಾಗಿ ದೋಷಪೂರಿತ ವ್ಯವಸ್ಥೆಯನ್ನು ಕೈಬಿಡಬೇಕು” ಎಂದು ಅವರು ಪ್ರತಿಪಾದಿಸಿದರು.
