ಮೈಸೂರು, ಜನವರಿ 3, 2026 : ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳು ಇಂದು ಅತ್ಯಂತ ದಯನೀಯ ಸ್ಥಿತಿಯಲ್ಲಿದ್ದು, ಅವುಗಳನ್ನು ಸಾವಿನ ಹಾದಿಯಿಂದ ತಪ್ಪಿಸಿ ಐಸಿಯುನಿಂದ ಹೊರತರುವ ತುರ್ತು ಕ್ರಮಗಳ ಅಗತ್ಯವಿದೆ ಎಂದು ಜನಾಂದೋಲನಗಳ ಮಹಾಮೈತ್ರಿ ಸಂಘಟನೆಯ ರಾಜ್ಯ ಸಂಚಾಲಕ ಉಗ್ರ ನರಸಿಂಹೇಗೌಡ ಅವರು ಆತಂಕ ವ್ಯಕ್ತಪಡಿಸಿದ್ದಾರೆ.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವೈದ್ಯರಾಗಿರುವ ಡಾ. ಸುಧಾಕರ್ ಅವರು ಉನ್ನತ ಶಿಕ್ಷಣ ಸಚಿವರಾಗಿದ್ದರೂ, ದೇಶದ ಅತ್ಯಂತ ಹಳೆಯ ಮತ್ತು ಪ್ರತಿಷ್ಠಿತ ವಿಶ್ವವಿದ್ಯಾಲಯಗಳನ್ನು ಬಲಪಡಿಸುವಲ್ಲಿ ವಿಫಲರಾಗಿದ್ದಾರೆ. ಬದಲಿಗೆ ಅವುಗಳನ್ನು ಮೌನವಾಗಿ ಕೊಲ್ಲಲು ಅವರು ಸಚಿವ ಸಂಪುಟದಲ್ಲಿ ಕುಳಿತಂತಿದೆ ಎಂದು ತೀಕ್ಷ್ಣವಾಗಿ ಟೀಕಿಸಿದರು. ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳನ್ನು ಪದೇ ಪದೇ ಬದಲಾಯಿಸುವ ಮೂಲಕ ವಿಶ್ವವಿದ್ಯಾಲಯಗಳನ್ನು ನಿರ್ಲಕ್ಷಿಸಲಾಗುತ್ತಿದೆ. ಉನ್ನತ ಶಿಕ್ಷಣ ಸಚಿವರು ಕೇವಲ ವಿದೇಶಿ ಪ್ರವಾಸಗಳಲ್ಲಿ ಹಾಗೂ ಖಾಸಗಿ ಮತ್ತು ವಿದೇಶಿ ವಿಶ್ವವಿದ್ಯಾಲಯಗಳನ್ನು ಉತ್ತೇಜಿಸುವಲ್ಲಿ ನಿರತರಾಗಿದ್ದಾರೆ ಎಂದು ಅವರು ದೂರಿದರು.
ವಿಶ್ವವಿಖ್ಯಾತ ಮೈಸೂರು ವಿಶ್ವವಿದ್ಯಾನಿಲಯದಂತಹ ಸಂಸ್ಥೆಗಳಲ್ಲಿ ಖಾಯಂ ಪ್ರಾಧ್ಯಾಪಕರನ್ನು ನೇಮಕ ಮಾಡದೆ, ಕೇವಲ ಅತಿಥಿ ಉಪನ್ಯಾಸಕರ ಮೇಲೆ ಇಡೀ ಶಿಕ್ಷಣ ವ್ಯವಸ್ಥೆಯನ್ನು ಹೇರಲಾಗಿದೆ. ಇದರಿಂದಾಗಿ ಬೋಧನೆಯ ಗುಣಮಟ್ಟ ಗಣನೀಯವಾಗಿ ಕುಸಿಯುತ್ತಿದೆ. ಇಂದಿನ ದಿನಗಳಲ್ಲಿ ರಾಜ್ಯದ ಉನ್ನತ ಶಿಕ್ಷಣ ಸಂಸ್ಥೆಗಳನ್ನು ಉಳಿಸಿಕೊಳ್ಳುವುದು ಒಂದು ತುರ್ತು ಅಗತ್ಯವಾಗಿದ್ದು, ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಈ ಸಂಸ್ಥೆಗಳನ್ನು ಪುನಶ್ಚೇತನಗೊಳಿಸಬೇಕು ಎಂದು ಉಗ್ರ ನರಸಿಂಹೇಗೌಡ ಈ ಸಂದರ್ಭದಲ್ಲಿ ಆಗ್ರಹಿಸಿದರು.
