ನೆಲಮಂಗಲ, ಜುಲೈ 08, 2025 : ಪ್ರೇಮ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಯುವಕನೊಬ್ಬನನ್ನು ವಿವಸ್ತ್ರಗೊಳಿಸಿ, ಮಾರಣಾಂತಿಕ ಹಲ್ಲೆ ನಡೆಸಿ, ಆ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವ ಬೆದರಿಕೆ ಹಾಕಿರುವ ಘಟನೆ ನೆಲಮಂಗಲದಲ್ಲಿ ವರದಿಯಾಗಿದೆ. ಈ ಸಂಬಂಧ ನಾಲ್ವರು ಆರೋಪಿಗಳನ್ನು ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಹೇಮಂತ್, ಯಶ್ವಂತ್, ಶಿವಶಂಕರ್ ಮತ್ತು ಶಶಾಂಕ್ ಗೌಡ ಎಂದು ಗುರುತಿಸಲಾಗಿದೆ. ಕುಶಾಲ್ ಎಂಬ ಯುವಕ ಮತ್ತು ಒಬ್ಬ ಯುವತಿ ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಕೆಲವು ತಿಂಗಳ ಹಿಂದೆ ಇವರ ಸಂಬಂಧ ಮುರಿದುಬಿದ್ದಿತ್ತು. ಈ ನಡುವೆ, ಯುವತಿಗೆ ಬೇರೊಬ್ಬ ಯುವಕನ ಪರಿಚಯವಾಗಿತ್ತು. ಇದನ್ನು ಸಹಿಸಿಕೊಳ್ಳಲಾಗದ ಕುಶಾಲ್, ಯುವತಿಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದಾನೆ ಎಂದು ತಿಳಿದುಬಂದಿದೆ.
ಇದರಿಂದ ಕೆರಳಿದ ಯುವತಿ, ತನ್ನ ಹೊಸ ಗೆಳೆಯ ಮತ್ತು ಇತರ ಸ್ನೇಹಿತರೊಂದಿಗೆ ಸೇರಿಕೊಂಡು ಕುಶಾಲ್ನನ್ನು ಅಪಹರಿಸಿ ಹಲ್ಲೆ ನಡೆಸಲು ಸಂಚು ರೂಪಿಸಿದ್ದಾಳೆ. ಅದರಂತೆ, “ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳೋಣ” ಎಂದು ಕುಶಾಲ್ನನ್ನು ಕರೆಸಿಕೊಂಡು ಕಾರಿನಲ್ಲಿ ಅಪಹರಿಸಿದ್ದಾರೆ. ನಂತರ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ.
ಹಲ್ಲೆ ನಡೆಸುವಾಗ, ಕುಶಾಲ್ನನ್ನು ವಿವಸ್ತ್ರಗೊಳಿಸಿ ಆತನ ಮರ್ಮಾಂಗಕ್ಕೆ ಒದ್ದಿದ್ದಾರೆ. ಅಲ್ಲದೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಂತೆ ಇದೂ ಆಗಲಿದೆ ಎಂದು ಹೇಳಿ ಹಲ್ಲೆಯ ದೃಶ್ಯಗಳನ್ನು ವೀಡಿಯೋ ಮಾಡಿದ್ದಾರೆ. ತಾವು ಎ1 ಹೇಮಂತ್ ಮತ್ತು ಎ2 ನಾನು ಎಂದು ಹೇಳಿಕೊಳ್ಳುತ್ತಾ ವೀಡಿಯೋ ಚಿತ್ರೀಕರಿಸಿದ್ದಾರೆ. ಈ ವೀಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆಯನ್ನೂ ಹಾಕಿದ್ದಾರೆ.
ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರು ಆರೋಪಿಗಳನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಯುತ್ತಿದ್ದಾರೆ.
