ಕಾವೇರಿಯ ಹೋರಾಟ ದಿನೇ ದಿನೇ ಹೆಚ್ಚಾಗುತ್ತಿದೆ. ಕಾವೇರಿ ವಿಚಾರವನ್ನು ರಾಜ್ಯ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲ ಎಂದು ಶಾಸಕ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿಚಾರದಲ್ಲಿ ರಾಜ್ಯ ಸರ್ಕಾರ ವೈಫಲ್ಯ ಕಾಣುತ್ತಿದೆ. ಇದರ ಪರಿಣಾಮ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯ ಸಿಗದ ಸಂದರ್ಭ ಸೃಷ್ಟಿ ಆಗಿದೆ. ಕಾವೇರಿ ಕಣಿವೆ ಹೋರಾಟದ ರೈತರು ಸಹ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ನಡುವೆಯೂ ಸುಪ್ರೀಂ ಕೋರ್ಟ್ ನಲ್ಲಿ ನಮಗೆ ಹಿನ್ನಡೆಯಾಗಿದೆ.
ಇದು ಈ ಭಾಗದ ರೈತರಿಗೆ ದೊಡ್ಡ ಆಘಾತವಾಗಿದೆ ಎಂದರು. ಬೆಂಗಳೂರಿನಲ್ಲಿ ಬಿಜೆಪಿ ಸಹ ರಾಜ್ಯ ಸರ್ಕಾರ ವಿರುದ್ಧ ಹೋರಾಟ ಕೈಗೊಂಡಿದೆ. ನ್ಯಾಯ ಸಿಗುವವರೆಗೂ ನಾವು ನಮ್ಮ ಹೋರಾಟ ನಡೆಸುತ್ತೇವೆ. ರೈತರು ಒಂದು ಕಡೆ ಬೆಂಗಳೂರು ಬಂದ್ ಕರೆ ಕೊಟ್ಟಿದ್ದಾರೆ. ಮಂಡ್ಯದಲ್ಲಿ ಹೋರಾಟ ನಡೆಯುತ್ತಿದೆ. ರಾಜ್ಯದ ಬೇರೆ ಬೇರೆ ಕಡೆ ಹೋರಾಟ ನಡೆಯುತ್ತಿದೆ. ಆದರೆ, ರಾಜ್ಯ ಸರ್ಕಾರ, ಮಂತ್ರಿಗಳು ಹೋರಾಟದ ಬಗ್ಗೆ ತಲೆ ಕೆಡಿಸಿಕೊಳ್ಳದೇ ಐದು ಡಿಸಿಎಂ, ಆರು ಡಿಸಿಎಂ ಆಗಬೇಕು ಅಂತ ತಲೆಕೆಡಿಸಿಕೊಂಡಿದೆ ಎಂದು ಹರಿಹಾಯ್ದರು.