– ಶ್ರೀಗಳ ಆಶಿರ್ವಾದ ಪಡೆದ ಬಿಜೆಪಿ ಅಭ್ಯರ್ಥಿ
– ಯಾವ ವಿಚಾರ ಚರ್ಚಿಸಿಲ್ಲ ಎಂದ ಒಡೆಯರ್
ಪ್ರತಿನಿಧಿ ವರದಿ ಮೈಸೂರು
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು ಮಂಗಳವಾರ ನಗರದ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಅವರ ಆಶೀರ್ವಾದ ಪಡೆದರು. ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠಕ್ಕೆ ತೆರಳಿದ ಯದುವೀರ್ ಅವರಿಗೆ ಮಠದ ವತಿಯಿಂದ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಶ್ರೀಗಳ ಆಶೀರ್ವಾದ ಪಡೆದು, ಕೆಲಕಾಲ ಅವರೊಂದಿಗೆ ಮಾತುಕತೆ ನಡೆಸಿದರು.
ಬಳಿಕ ಸುದ್ದಿಗಾರರೊಡನೆ ಮಾತನಾಡಿದ ಯದುವೀರ್ ಒಡೆಯರ್, ಸುತ್ತೂರು ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದೇನೆ. ಭೇಟಿ ವೇಳೆಯಲ್ಲಿ ಬೇರೆ ಯಾವ ವಿಚಾರಗಳ ಬಗ್ಗೆಯೂ ಚರ್ಚಿಸಿಲ್ಲ. ನಮ್ಮ ಚುನಾವಣಾ ಪ್ರಚಾರ ಎಂದಿನಂತೆ ಬೇರೆ ಬೇರೆ ಕ್ಷೇತ್ರಗಳಲ್ಲಿ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆಗೆ ಇನ್ನೂ ಅಧಿಸೂಚನೆ ಹೊರಡಿಸಿಲ್ಲ. ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಬರುವ ಕುರಿತು ನನಗೆ ಇನ್ನೂ ಮಾಹಿತಿ ಇಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್. ಬಾಲರಾಜ್, ಮಾಜಿ ಸಚಿವ ಎನ್. ಮಹೇಶ್, ಮಾಜಿ ಶಾಸಕ ನಿರಂಜನಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ, ಮಾಜಿ ಉಪ ಮೇಯರ್ ಶೈಲೇಂದ್ರ, ಮುಖಂಡರಾದ ಶಿವಕುಮಾರ್, ಫಣೀಶ್, ಕೃಷ್ಣಪ್ಪಗೌಡ, ಕೇಬಲ್ ಮಹೇಶ್ ಇತರರಿದ್ದರು.
================
ಬಾಕ್ಸ್
ರಾಜ-ರಾಣಿ ಪಟ್ಟಕ್ಕೆ ಮಹತ್ವವಿಲ್ಲ:
“ಯಾರು ರಾಜ” ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಲು ಯದುವೀರ್ ಒಡೆಯರ್ ನಿರಾಕರಿಸಿದರು. ಸುತ್ತೂರು ಮಠದಲ್ಲಿ ಈ ವಿಷಯದ ಕುರಿತು ಮಾತನಾಡಿದ ಅವರು, ಮುಖ್ಯಮಂತ್ರಿಗಳ ಹೇಳಿಕೆ ನನ್ನ ಗಮನಕ್ಕೆ ಬಂದಿಲ್ಲ. ಆ ವಿಚಾರದ ಬಗ್ಗೆ ನಾನು ಹೇಗೆ ಪ್ರತಿಕ್ರಿಯಿಸಲಿ. ನಾನು ಈಗಾಗಲೇ ಹೇಳಿದ್ದೇನೆ, ಸಂವಿಧಾನದಲ್ಲಿ ರಾಜ ರಾಣಿ ಎಂಬ ಯಾವ ಪಟ್ಟಕ್ಕೂ ವಿಶೇಷ ಮಹತ್ವ ಇಲ್ಲ. ಎಲ್ಲರೂ ಪ್ರಜೆಗಳೇ, ಇಷ್ಟನ್ನು ಮಾತ್ರ ನಾನು ಹೇಳಬಲ್ಲೆ ಎಂದರು.
===============